ADVERTISEMENT

ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 18:59 IST
Last Updated 14 ಫೆಬ್ರುವರಿ 2020, 18:59 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು: ಇದೇ 17ರಿಂದ 20ರವರೆಗೆ ವಿಧಾನ ಮಂಡಲದ ಜಂಟಿ ಅಧಿವೇಶನ ಜರುಗಲಿದ್ದು, ಇದರ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

‘ಜಂಟಿ ಅಧಿವೇಶನದ ಪ್ರಯುಕ್ತ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘ-ಸಂಸ್ಥೆಗಳ ಕಾರ್ಯಕರ್ತರು ಪ್ರತಿಭಟನೆ, ಧರಣಿ, ವಿಧಾನಸೌಧ ಮುತ್ತಿಗೆ, ಸತ್ಯಾಗ್ರಹ, ಮೆರವಣಿಗೆ ನಡೆಸುವ ಸಾಧ್ಯತೆ ಇದೆ. ಈ ರೀತಿಯಾದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಲಿದೆ. ಹೀಗಾಗಿ, ಫೆ. 17ರ ಬೆಳಿಗ್ಗೆ 6 ಗಂಟೆಯಿಂದ 20ರ ತಡರಾತ್ರಿ 12 ಗಂಟೆವರೆಗೆ ವಿಧಾನಸೌಧದ 2 ಕಿ.ಮೀ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಆದೇಶದಲ್ಲಿ ಹೇಳಲಾಗಿದೆ.

ADVERTISEMENT

‘5ಕ್ಕಿಂತ ಹೆಚ್ಚು ಜನ‌ ಗುಂಪು ಕಟ್ಟಿಕೊಂಡು ಸೇರುವಂತಿಲ್ಲ. ಮೆರವಣಿಗೆ ಅಥವಾ ಸಭೆ‌ ನಡೆಸುವಂತಿಲ್ಲ. ಪಟಾಕಿ ಸಿಡಿಸುವುದನ್ನೂ ನಿರ್ಬಂಧಿಸಲಾಗಿದೆ. ಅಪಾಯಕಾರಿ ಆಯುಧವನ್ನೂ ವಿಧಾನಸೌಧದ ಒಳಗೆ ತೆಗೆದುಕೊಂಡು ಹೋಗುವಂತಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದೂ ಆದೇಶದಲ್ಲಿ ಎಚ್ಚರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.