ಬೆಂಗಳೂರು: ಹವಾಮಾನದಲ್ಲಿನ ವೈಪರೀತ್ಯ, ಮಳೆಯಿಂದಾಗಿ ನಗರದ ಜನರನ್ನು ವೈರಾಣು ಜ್ವರ ಕಾಡಲಾರಂಭಿಸಿದೆ. ಆಸ್ಪತ್ರೆಗಳ ಹೊರ ರೋಗಿ ವಿಭಾಗಗಳಿಗೆ ಭೇಟಿ ನೀಡುತ್ತಿರುವವರಲ್ಲಿ ಶೇ 30ಕ್ಕೂ ಅಧಿಕ ಮಂದಿ ಜ್ವರ ತಪಾಸಣೆಗೆ ಒಳಪಡುತ್ತಿದ್ದಾರೆ.
ಕಳೆದೊಂದು ತಿಂಗಳಿನಿಂದ ನಗರ ದಲ್ಲಿ ಮಳೆ ಸುರಿಯುತ್ತಿದೆ. ವಾರದಿಂದ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇದ್ದು, ಸಾಧಾರಣ ಮಳೆಯಾಗುತ್ತಿದೆ. ಆಗಾಗ ಸುರಿಯುತ್ತಿರುವ ಮಳೆ ಯಿಂದಾಗಿ ಜನರಲ್ಲಿನ ಜ್ವರ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮಕ್ಕಳು ಹಾಗೂ ವೃದ್ಧರು ಹೆಚ್ಚಾಗಿ ಗಾಸಿಗೊಳ್ಳುತ್ತಿದ್ದಾರೆ.
ಜಯನಗರ ಜನರಲ್ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ, ಕೆ.ಸಿ. ಜನರಲ್ ಆಸ್ಪತ್ರೆ, ವಿಕ್ಟೋರಿಯಾ, ವಾಣಿವಿಲಾಸ ಸೇರಿದಂತೆ ಪ್ರಮುಖ ಸರ್ಕಾರಿ ಆಸ್ಪತ್ರೆಗಳಿಗೆ ಪ್ರತಿನಿತ್ಯ ಸರಾಸರಿ 50 ಜ್ವರ ಪೀಡಿತರು ಭೇಟಿ ನೀಡುತ್ತಿದ್ದಾರೆ. ಅದೇ ರೀತಿ, ಮಣಿಪಾಲ್, ನಾರಾ ಯಣ ಹೆಲ್ತ್, ಅಪೋಲೊ, ಫೋರ್ಟಿಸ್ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಿಗೂ ಜ್ವರದ ಚಿಕಿತ್ಸೆಗಾಗಿ ಬರುವವರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.ವಿವಿಧ ಕ್ಲಿನಿಕ್ಗಳಲ್ಲಿ ಸಹ ರೋಗಿಗಳ ದಟ್ಟಣೆ ಹೆಚ್ಚಾಗುತ್ತಿದೆ.
ಮಕ್ಕಳಿಗೆ ಸಮಸ್ಯೆ:‘ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರು ತ್ತದೆ. ಹಾಗಾಗಿ, ಸಾಮಾನ್ಯವಾಗಿ ಜ್ವರ ಮೊದಲು ಮಕ್ಕಳಿಗೆ ಬರುತ್ತದೆ. ಬಳಿಕ ಮನೆಮಂದಿಗೆಲ್ಲ ಹರಡುತ್ತದೆ. ನೆಗಡಿ, ಕೆಮ್ಮು, ಮೈ–ಕೈ ನೋವಿನಿಂದ ಪ್ರಾರಂಭವಾಗಿ, ಐದಾರು ದಿನ ಬಾಧಿಸುತ್ತದೆ. ಜ್ವರ ಗಂಭೀರ ಸ್ವರೂಪ ಪಡೆದಾಗ ನ್ಯುಮೋನಿಯಾ ಆಗುವ ಸಾಧ್ಯತೆಗಳಿವೆ’ ಎಂದು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ನಿರ್ದೇಶಕ ಡಾ.ಕೆ.ಎಸ್. ಸಂಜಯ್ ತಿಳಿಸಿದರು.
‘ಆಸ್ಪತ್ರೆಯ ಹೊರ ರೋಗ ವಿಭಾಗಕ್ಕೆ ಪ್ರತಿನಿತ್ಯ 300ಕ್ಕೂ ಅಧಿಕ ಮಂದಿ ಭೇಟಿ ನೀಡುತ್ತಾರೆ. ಅವರಲ್ಲಿ ಮೂರನೇ ಒಂದರಷ್ಟು ಜ್ವರದ ಪ್ರಕರಣಗಳಾಗಿವೆ’ ಎಂದು ಮಾಹಿತಿ ನೀಡಿದರು.
‘ವಾತಾವರಣದಲ್ಲಿನ ಬದಲಾ ವಣೆಗಳು ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತವೆ.ಫ್ಲೂ (ಇನ್ಫ್ಲು ಯೆಂಝಾ) ಜತೆಗೆ ವೈರಾಣು ಸೋಂಕು ಕಾಣಿಸಿಕೊಳ್ಳುತ್ತಿದೆ. ಆಸ್ಪತ್ರೆ ದಾಖಲಾತಿ ಪ್ರಕಾರ ಕಳೆದ ವರ್ಷಕ್ಕೆ ಹೋಲಿಸಿದರೆ ಜೂನ್ ತಿಂಗಳಲ್ಲಿ ಜ್ವರ ಪೀಡಿತರ ಸಂಖ್ಯೆ ಶೇ 15ರಷ್ಟು ಹೆಚ್ಚಳವಾಗಿದೆ’ ಎಂದು ನಾರಾಯಣ ಹೆಲ್ತ್ ಸಿಟಿಯ ಆಂತರಿಕ ಔಷಧ ವಿಭಾಗದ ಸಲಹೆಗಾರ
ಡಾ. ಮಹೇಶ್ ಕುಮಾರ್ ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.