ಬೆಂಗಳೂರು: ‘ವಿಶ್ವಕರ್ಮ, ಅಕ್ಕಸಾಲಿಗರು ಸಂಕಷ್ಟದಲ್ಲಿದ್ದು ಅವರಿಗೆ ನೆರವಾಗುವ ದೃಷ್ಟಿಯಿಂದ ವಿಶೇಷ ಪ್ಯಾಕೇಜ್ ಪ್ರಕಟಿಸಬೇಕು’ ಎಂದು ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ಆರ್. ಮಧುಸೂಧನ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಅಗತ್ಯ ಕೌಶಲ ಮತ್ತು ಉಪಕರಣಗಳು ಇದ್ದರೂ ಕಚ್ಚಾ ವಸ್ತುಗಳ ಕೊರತೆಯಿಂದ ಕೆಲಸ ಇಲ್ಲದಂತಾಗಿದೆ. ಬಂಡವಾಳಶಾಹಿಗಳ ಹಾವಳಿಯಿಂದ ಗುಡಿ ಕೈಗಾರಿಗಳು ತೀವ್ರ ನಷ್ಟ ಅನುಭವಿಸುತ್ತಿವೆ’ ಎಂದು ಅಳಲು ತೋಡಿಕೊಂಡಿದ್ದಾರೆ.
‘ಅವಕಾಶಗಳ ಕೊರತೆಯಿಂದ ಇಡೀ ಸಮುದಾಯ ಸಂಕಷ್ಟಕ್ಕೆ ಒಳಗಾಗಿದೆ. ಆದ್ದರಿಂದ, ನಿವೇಶನಗಳ ಹಂಚಿಕೆ ಮತ್ತು ಮನೆಗಳನ್ನು ಮಂಜೂರು ಮಾಡಲು ಕ್ರಮಕೈಗೊಳ್ಳಬೇಕು. ಹಣಕಾಸಿನ ನೆರವು ನೀಡುವುದರ ಜೊತೆಗೆ, ಈ ಸಮುದಾಯದ ಜೀವನೋಪಾಯವನ್ನು ಬೆಂಬಲಿಸುವ ಯೋಜನೆಗಳನ್ನು ರೂಪಿಸಬೇಕು’ ಎಂದು ಆಗ್ರಹಿಸಿದ್ದಾರೆ.
‘ಕಚ್ಚಾ ವಸ್ತುಗಳ ಖರೀದಿಗೆ ಸಬ್ಸಿಡಿ ಒದಗಿಸಬೇಕು. ಸಾಂಪ್ರದಾಯಿಕ ಕುಶಲಕರ್ಮಿಗಳ ಗುರುತಿಸುವಿಕೆ, ರಕ್ಷಣೆ ಮತ್ತು ಪುನರುಜ್ಜೀವನಕ್ಕೆ ನೆರವು ನೀಡಬೇಕು’ ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.