
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಆಯು
ಕ್ತರು ಮತ್ತು ಎಂಜಿನಿಯರ್ಗಳು ಖುದ್ದಾಗಿ ಭೇಟಿ ನೀಡಬೇಕು. ಸಮಸ್ಯೆ ಪರಿಹಾರ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.
ಶನಿವಾರ ರಾತ್ರಿ ಮತ್ತು ಭಾನುವಾರ ಬೆಳಿಗ್ಗೆ ಸುರಿದ ಮಳೆಯಿಂದ ಪ್ರವಾಹ ಉಂಟಾಗಿರುವ ಹಾಗೂ ಮನೆಗಳಿಗೆ ನೀರು ನುಗ್ಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು.
ಪಂಪ್ ಬಳಕೆ: ಶನಿವಾರ ಸುರಿದ ಮಳೆಯಿಂದ ರಾಜಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿ ಹಿಮ್ಮುಖವಾಗಿ ಚಲಿಸಿದ ಕಾರಣ ಯಲಹಂಕ ವಲಯ ವ್ಯಾಪ್ತಿಯ ರಮಣಶ್ರೀ ಗಾರ್ಡೇನಿಯಾ ಲೇಔಟ್ ಹಾಗೂ ನಾರ್ತ್ ಹುಡ್ನಲ್ಲಿ ಸುಮಾರು 20 ವಿಲ್ಲಾಗಳಿಗೆ ಮಳೆ ನೀರು ನುಗ್ಗಿತ್ತು. 15 ಎಚ್.ಪಿ. ಪಂಪ್ ಮೂಲಕ ನೀರನ್ನು ತೆರವುಗೊಳಿಸಲಾಯಿತು ಎಂದು ಅವರು ತಿಳಿಸಿದರು.
ಮರ ಬಿದ್ದಿರುವ ವಿವರ: ನಗರದಲ್ಲಿ ಶನಿವಾರ ಮತ್ತು ಭಾನುವಾರ 15 ಮರ ಹಾಗೂ 49 ರೆಂಬೆ, ಕೊಂಬೆಗಳು ಬಿದ್ದಿವೆ. ಈ ಪೈಕಿ 13 ಮರ ಹಾಗೂ 32 ರೆಂಬೆಗಳನ್ನು ತೆರವುಗೊಳಿಸಲಾಗಿದ್ದು, ಉಳಿದವುಗಳ ತೆರವು ಕಾರ್ಯ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ವಿಶೇಷ ಆಯುಕ್ತರ ಭೇಟಿ: ಯೋಜನಾ ವಿಭಾಗದ ವಿಶೇಷ ಆಯುಕ್ತ ಡಾ. ಕೆ. ಹರೀಶ್ ಕುಮಾರ್, ವಿಪತ್ತು ನಿರ್ವಹಣಾ ವಿಭಾಗದ ವಿಶೇಷ ಆಯುಕ್ತ ಸುರೊಳ್ಕರ್ ವಿಕಾಸ್ ಕಿಶೋರ್ ಇಂದು ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ, ಕವಿಕಾ, ನಾಯಂಡಹಳ್ಳಿ, ಸಿಲ್ಕ್ ಬೋರ್ಡ್ ಜಂಕ್ಷನ್ ಹಾಗೂ ಹೆಚ್.ಎಸ್.ಆರ್ ಲೇಔಟ್ ಬಳಿ ರಾಜಕಾಲುವೆಗಳನ್ನು ಪರಿಶೀಲಿಸಿದರು. ರಾಜಕಾಲುವೆಗಳಲ್ಲಿ ಸಂಪೂರ್ಣ ಹೂಳನ್ನು ತೆರವುಗೊಳಿಸಿ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಿಯಂತ್ರಣ ಕೊಠಡಿಗಳ ಪರಿಶೀಲನೆ: ಪಾಲಿಕೆಯ ಆಯಾ ವಲಯಗಳಲ್ಲಿರುವ ನಿಯಂತ್ರಣ ಕೊಠಡಿಗಳಿಗೆ ವಲಯ ಆಯುಕ್ತರು ಹಾಗೂ ಜಂಟಿ ಆಯುಕ್ತರು ಭೇಟಿ ನೀಡಿ ನಾಗರಿಕರಿಂದ ಬಂದ ದೂರುಗಳನ್ನು ಪರಿಶೀಲಿಸಿದರು. ಪಾಲಿಕೆ ನಿಯಂತ್ರಣ ಕೊಠಡಿಗೆ ಬರುವ ದೂರುಗಳನ್ನು ತ್ವರಿತಗತಿಯಲ್ಲಿ ಅಧಿಕಾರಿಗಳ ಗಮನಕ್ಕೆ ತಂದು ಇತ್ಯರ್ಥಪಡಿಸಲು ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.