ADVERTISEMENT

ನ.4, 5ರಂದು ವಿಶ್ವೇಶ್ವರಾಯ ಕಬ್ಬಿಣ ಕಾರ್ಖಾನೆ ಶತಮಾನೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2023, 16:43 IST
Last Updated 27 ಅಕ್ಟೋಬರ್ 2023, 16:43 IST
   

ಬೆಂಗಳೂರು: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯು ಶತಮಾನೋತ್ಸವ ಸಂಭ್ರಮದಲ್ಲಿದ್ದು, ನ.4 ಮತ್ತು ನ.5ರಂದು ಭದ್ರಾವತಿಯಲ್ಲಿರುವ ಘಟಕದಲ್ಲಿ ಶತಮಾನೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ. 

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಲಾವಿದ ಹಾಗೂ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಸ್. ದೊಡ್ಡಣ್ಣ, ‘ಕಾರ್ಖಾನೆಯು ಕೈಗಾರಿಕಾ ವಲಯದಲ್ಲಿ ತನ್ನದೆ ಆದ ಹೆಗ್ಗುರುತು ಮೂಡಿಸಿದೆ. ಈ ಕೈಗಾರಿಕೆಯ ಶತಮಾನೋತ್ಸವ ಸಮಾರಂಭವನ್ನು ಮೈಸೂರಿನ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹಾಗೂ ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ’ ಎಂದು ಹೇಳಿದರು. 

‘ಈ ಸಮಾರಂಭದ ಪ್ರಯುಕ್ತ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್, ಕೆ.ಎಲ್‌.ಇ. ವಿದ್ಯಾಸಂಸ್ಥೆ ಅಧ್ಯಕ್ಷ ಪ್ರಭಾಕರ ಕೋರೆ, ವಿ.ಆರ್.ಎಲ್. ಸಮೂಹ ಸಂಸ್ಥೆಗಳ ಅಧ್ಯಕ್ಷ ವಿಜಯ ಸಂಕೇಶ್ವರ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಗುತ್ತದೆ. ಮಾಜಿ ಮುಖ್ಯಮಂತ್ರಿಗಳನ್ನೂ ಇದೇ ಸಂದರ್ಭದಲ್ಲಿ ಗೌರವಿಸಲಾಗುತ್ತದೆ’ ಎಂದು ಹೇಳಿದರು. 

ADVERTISEMENT

ವಕೀಲ ಹಾಗೂ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಎ. ರೇವಣಸಿದ್ಧಯ್ಯ, ‘ಶತಮಾನೋತ್ಸವದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ’ ಎಂದರು. 

‘ಮೈಸೂರಿನ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅವಧಿಯಲ್ಲಿ ದಿವಾನರಾಗಿದ್ದ ಸರ್.ಎಂ. ವಿಶ್ವೇಶ್ವರಯ್ಯ ಅವರ ಮಾರ್ಗದರ್ಶನದಂತೆ ಈ ಬೃಹತ್ ಉದ್ಯಮವನ್ನು 1923ರಲ್ಲಿ ಪ್ರಾರಂಭಿಸಲಾಯಿತು. ಕಾರ್ಖಾನೆಗೆ ಪ್ರಾರಂಭದಲ್ಲಿ ಮೈಸೂರು ಐರನ್ ಆ್ಯಂಡ್ ಸ್ಟೀಲ್ ವರ್ಕ್ಸ್ ಎಂದು ನಾಮಕರಣ ಮಾಡಲಾಗಿತ್ತು. 1975ರಲ್ಲಿ ವಿಶ್ವೇಶ್ವರಾಯ ಐರನ್ ಆ್ಯಂಡ್ ಸ್ಟೀಲ್ ಲಿಮಿಟೆಡ್ ಎಂಬುದಾಗಿ ಮರುನಾಮಕರಣ ಮಾಡಲಾಯಿತು’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.