ADVERTISEMENT

ನೀರು ಸೋರಿಕೆ ಶೇ 20ಕ್ಕೆ ತಗ್ಗಿಸಿ

ಬೆಂಗಳೂರು ಜಲಮಂಡಳಿಗೆ ಮುಖ್ಯಮಂತ್ರಿ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 22:16 IST
Last Updated 1 ಜೂನ್ 2021, 22:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಜಲಮಂಡಳಿ ವ್ಯಾಪ್ತಿಯಲ್ಲಿರುವ ನೀರಿನ ಸೋರಿಕೆ ಪ್ರಮಾಣವನ್ನು ಶೇಕಡ 36ರಿಂದ ಶೇ 20ಕ್ಕೆ ಇಳಿಸಲು ಅಗತ್ಯ ಕಾರ್ಯತಂತ್ರ ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಜಲ ಮಂಡಳಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಲಮಂಡಳಿಯ ಚಟುವಟಿಕೆಗಳ ಕುರಿತು ಮಂಗಳವಾರ ಪ್ರಗತಿ ಪರಿಶೀಲನೆ ನಡೆಸಿದ ಅವರು, ಇತರ ಬೃಹತ್‌ ನಗರಗಳಲ್ಲಿ ನೀರು ಸೋರಿಕೆ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧ್ಯಯನ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಿದರು.

ಎಲ್ಲ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಮಳೆಗಾಲ ಎದುರಿಸಲು ಕೈಗೊಂಡಿರುವ ತುರ್ತು ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ADVERTISEMENT

ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾಗಿರುವ 110 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊಳವೆ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿದೆ. 51 ಗ್ರಾಮಗಳಿಗೆ ಈಗಾಗಲೇ ನೀರು ಪೂರೈಕೆ ಮಾಡಲಾಗುತ್ತಿದೆ. 59 ಗ್ರಾಮಗಳಿಗೆ 2022ರ ವೇಳೆಗೆ ನೀರು ಪೂರೈಕೆ ಆರಂಭವಾಗಲಿದೆ. 110 ಗ್ರಾಮಗಳಲ್ಲೂ ಒಳಚರಂಡಿ ವ್ಯವಸ್ಥೆ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ನಗರಕ್ಕೆ ಪ್ರತಿದಿನ 77.5 ಕೋಟಿ ಲೀಟರ್‌ ಹೆಚ್ಚುವರಿ ನೀರನ್ನು ಒದಗಿಸುವ ಕಾವೇರಿ ಐದನೇ ಹಂತದ ಯೋಜನೆ ಪ್ರಗತಿಯಲ್ಲಿದೆ. ₹ 5,550 ಕೋಟಿ ವೆಚ್ಚದ ಯೋಜನೆಯ ಕಾಮಗಾರಿಗಳು ನಿಗದಿಗಿಂತ ವೇಗವಾಗಿ ನಡೆಯುತ್ತಿವೆ. 2023ರಲ್ಲಿ ಯೋಜನೆಯ ಕಾಮಗಾರಿ ಪೂರ್ಣಗೊಳ್ಳಲಿವೆ ಎಂದು ಅಧಿಕಾರಿಗಳು ವಿವರಿಸಿದರು.

ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್‌ ಮತ್ತು ಜಲ ಮಂಡಳಿ ಅಧ್ಯಕ್ಷ ಎನ್‌. ಜಯರಾಂ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.