ADVERTISEMENT

‘ನೀರಿನ ದುರ್ಬಳಕೆ ಕ್ರಿಮಿನಲ್‌ ಅಪರಾಧ’

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2019, 20:04 IST
Last Updated 6 ಮಾರ್ಚ್ 2019, 20:04 IST

ಬೆಂಗಳೂರು: ನೀರಿನ ಪೋಲು ಮತ್ತು ದುರ್ಬಳಕೆ ಕ್ರಿಮಿನಲ್‌ ಅಪರಾಧಕ್ಕೆ ಸಮ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ನಗರದ ಜಕ್ಕೂರಿನ ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಬುಧವಾರ ಏರ್ಪಡಿಸಿದ್ದ ಸ್ಯಾಟ್‌ಕಾಂ (ಉಪಗ್ರಹ ಆಧಾರಿತ ಸಂಪರ್ಕ ವ್ಯವಸ್ಥೆ) ಸಂವಾದದಲ್ಲಿ ಅವರು ಮಾತನಾಡಿದರು.

ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜತೆ ಸಂವಾದ ನಡೆಸಿದರು. ಸಂವಾದದಲ್ಲಿ 15,000 ಜನ ಪಾಲ್ಗೊಂಡಿದ್ದರು.

ADVERTISEMENT

ದೇಶದಲ್ಲಿ ತೀವ್ರ ಜಲಕ್ಷಾಮದ ಜಿಲ್ಲೆಗಳು ಎಂದು ಗುರುತಿಸಲಾಗಿರುವ 24 ಜಿಲ್ಲೆಗಳಲ್ಲಿ 16 ಜಿಲ್ಲೆಗಳು ಕರ್ನಾಟಕದ್ದು. ಈ ಜಲಕ್ಷಾಮವನ್ನು ಎದುರಿಸಲು ಮತ್ತು ಮುಂದಿನ ಪೀಳಿಗೆಗೆ ನೀರನ್ನು ಕಾಯ್ದಿರಿಸುವ ಕೆಲಸ ಆಗಬೇಕು ಹಾಗೂ ಅಗತ್ಯಕ್ಕೆ ತಕ್ಕಂತೆ ಬಳಸುವ ನಿಟ್ಟಿನಲ್ಲಿ ಜನಾಂದೋಲನ ರೂಪಿಸಬೇಕಾಗಿದೆ ಎಂದು ಹೇಳಿದರು.

ಇದಕ್ಕಾಗಿ ‘ಜಲಾಮೃತ’ ಎಂಬ ಯೋಜನೆಯನ್ನು ರೂಪಿಸಲಾಗಿದೆ. ಅದನ್ನು ಎಲ್ಲ ಇಲಾಖೆಗಳ ಸಿಬ್ಬಂದಿ ಗಂಭೀರವಾಗಿ ಪರಿಗಣಿಸಿ ಭಾಗವಹಿಸಬೇಕು ಎಂದೂ ಅವರು ಸಲಹೆ ನೀಡಿದರು.

ಇದೇ 22 ರಂದು ‘ವಿಶ್ವಜಲ ದಿನ’ವನ್ನು ಆಚರಿಸಲಾಗುತ್ತಿದೆ. ಎಲ್ಲ ಸ್ಥಳೀಯ ಸಂಸ್ಥೆಗಳೂ ವಿಶ್ವ ಜಲ ದಿನ ಆಚರಿಸುವ ಮೂಲಕ ಜಲಾಮೃತ ಯೋಜನೆಯನ್ನು ಕಾರ್ಯಗತಗೊಳಿಸಬೇಕು. ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳು ಗೋಡೆ ಬರಹಗಳು, ಸ್ಟಿಕರ್‌, ಕರ ಪತ್ರಗಳ ಮೂಲಕ ಅರಿವು ಮೂಡಿಸಬೇಕು ಎಂದೂ ಸಚಿವರು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.