ಬೆಂಗಳೂರು: ‘ಲಿಂಗನಮಕ್ಕಿಯಿಂದ ನಗರಕ್ಕೆ ನೀರು ಪೂರೈಸುವ ಅವೈಜ್ಞಾನಿಕ ಯೋಜನೆಯನ್ನು ಕೈಬಿಟ್ಟು, ರಾಜಧಾನಿಯ ಕೆರೆಗಳ ಪುನರುಜ್ಜೀವನ, ಒಳಚರಂಡಿ ವ್ಯವಸ್ಥೆ ಹಾಗೂ ರಾಜಕಾಲುವೆಗಳ ಅಭಿವೃದ್ಧಿ ಮಾಡಬೇಕು’ ಎಂದು ಭಾರತೀಯ ಪ್ಲಂಬಿಂಗ್ ಅಸೋಸಿಯೇಷನ್ನ (ಎಪಿಐ) ಬೆಂಗಳೂರು ಶಾಖೆಯ ಅಧ್ಯಕ್ಷ ಬಿ.ಒ.ಪ್ರಸನ್ನ ಕುಮಾರ್ ಒತ್ತಾಯಿಸಿದರು.
ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶರಾವತಿ ನದಿಯಿಂದ ನೀರು ತರಲು ₹12,500 ಕೋಟಿ ಖರ್ಚು ಮಾಡಲು ಸರ್ಕಾರ ಮುಂದಾಗಿದೆ. ಇದೇ ಹಣವನ್ನು ನಗರದ ಕಸ ವಿಲೇವಾರಿ, ಒಳಚರಂಡಿ ವ್ಯವಸ್ಥೆ ಅಭಿವೃದ್ಧಿ, ರಾಜಕಾಲುವೆಗಳ ಅಭಿವೃದ್ಧಿ, ಜಲಮೂಲಗಳಿಗೆ ತ್ಯಾಜ್ಯ ಸೇರದಂತೆ ತಡೆಯುವುದು ಹಾಗೂ ನೀರಿನ ಮಿತ ಬಳಕೆಗೆ ಬೇಕಾದ ಅಗತ್ಯ ಕ್ರಮಗಳಿಗೆ ಬಳಸಿದರೆ ನೀರಿನ ಬವಣೆಗೆ ಪರಿಹಾರ ಕಂಡುಕೊಳ್ಳಬಹುದು’ ಎಂದರು.
‘ಅಪಾರ್ಟ್ಮೆಂಟ್ ಸಮುಚ್ಚಯಗಳಲ್ಲಿ ನೀರಿನ ಮೀಟರಿಂಗ್ ವ್ಯವಸ್ಥೆ ಅಳವಡಿಸುವ ಬಗ್ಗೆ ಬಿಲ್ಡರ್ಗಳ ಜೊತೆ ಮಾತುಕತೆ ನಡೆಸಿದ್ದೇವೆ. ಈ ವ್ಯವಸ್ಥೆಯಿಂದ ಶೇ 30ರಷ್ಟು ನೀರು ಉಳಿತಾಯ ಮಾಡಬಹುದು. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕು’ ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.