ರಾಜ್ಯದಲ್ಲಿ ಭಾರಿ ಮಳೆ ನಿರೀಕ್ಷೆ
ಬೆಂಗಳೂರು: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಗಾಳಿ ಸಹಿತ ಭಾರಿ ಮಳೆ ಮುಂದಿನ ಐದು ದಿನಗಳು ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಬುಧವಾರ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುವ ಸಂಭವವಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ‘ಆರೆಂಜ್ ಅಲರ್ಟ್’, ಬೆಳಗಾವಿ ಹಾಗೂ ಹಾಸನ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆಯ ಜತೆಗೆ ಗಾಳಿಯ ವೇಗವು 40ರಿಂದ 50 ಕಿ.ಮೀ. ತಲುಪುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬಹುತೇಕ ಸ್ಥಳಗಳು ಹಾಗೂ ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಭಾರಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಮೀನುಗಾರರಿಗೆ ಎಚ್ಚರಿಕೆ: ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು. ಸಣ್ಣ ಹಡಗುಗಳು ಸಂಚರಿಸದಂತೆ ಕ್ರಮವಹಿಸಬೇಕು. ಸಮುದ್ರದ ದಡದಲ್ಲಿ ಮನೋರಂಜನಾ ಚಟುವಟಿಕೆಗಳನ್ನು ಸಂಪೂರ್ಣ ಸ್ಥಗಿತಗೊಳಿಸಬೇಕು ಎಂದು ಇಲಾಖೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.