ಬೆಂಗಳೂರು: ‘ಸರ್ಕಾರ ನೀಡಿದ ಚೆಕ್ಗಳು ಬೌನ್ಸ್ ಆಗುತ್ತಿದ್ದು, ಅಭಿವೃದ್ಧಿ ಕೆಲಸಗಳಿಗೆ ಹಣ ಇಲ್ಲವಾಗಿದೆ.ಇದು ದರಿದ್ರ ಸರ್ಕಾರವಲ್ಲದೆ ಮತ್ತೇನು’ ಎಂದುವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ಶಿಕ್ಷಕರಿಗೆ ವೇತನ ನೀಡಲು ಹಣವಿಲ್ಲ. ಆರ್ಥಿಕ ವರ್ಷದ ಅಂತ್ಯಕ್ಕೆ ಕಾಲಿಟ್ಟಿದ್ದರೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೂರು ಕಂತು ಹಣ ಇನ್ನೂ ಬಿಡುಗಡೆಯಾಗಿಲ್ಲ. ದುಡ್ಡಿಲ್ಲದ ದರಿದ್ರ ಸರ್ಕಾರಕ್ಕೆ ಬಿ.ಎಸ್.ಯಡಿಯೂರಪ್ಪ ಮುಖ್ಯಸ್ಥರಾಗಿದ್ದಾರೆ. ಮುಖ್ಯಮಂತ್ರಿ ಹೋದಲ್ಲೆಲ್ಲ ಬರಿ ಬುರುಡೆ ಬಿಟ್ಟುಕೊಂಡು ತಿರುಗಾಡುತ್ತಿದ್ದಾರೆ’ ಎಂದು ಟೀಕಿಸಿದರು.
‘ಅಧಿಕಾರಿಗಳಿಗೆ ಭ್ರಷ್ಟಾಚಾರದ ಬಗ್ಗೆ ಉಪದೇಶ ಮಾಡುತ್ತಾರೆ. ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಹಣ ಹಂಚಿಕೆ ಮಾಡಿದ್ದಾರೆ. ಹಣ ನೀಡಿಲ್ಲ ಎನ್ನುವುದಾದರೆ ಯಡಿಯೂರಪ್ಪ ತಮ್ಮ ಎದೆಮುಟ್ಟಿಕೊಂಡು ಹೇಳಲಿ. ನಾನು ಹೇಳುತ್ತಿರುವುದು ಸುಳ್ಳು, ಮಾನಹಾನಿಕರ ಎಂದಾದರೆ ಕೋರ್ಟ್ನಲ್ಲಿ ಪ್ರಶ್ನಿಸಲಿ. ಅಲ್ಲಿ ಎಲ್ಲ ವಿವರಗಳನ್ನು ನೀಡುತ್ತೇನೆ’ ಎಂದು ಸವಾಲು ಹಾಕಿದರು.
ಸಚಿವರಾಗುವ ಸಲುವಾಗಿಯೇ ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರು. ಇಂತಹವರನ್ನು ಕಟ್ಟಿಕೊಂಡು ಭ್ರಷ್ಟಾಚಾರ ರಹಿತ ಸರ್ಕಾರ ಕೊಡುತ್ತಾರೆಯೆ? ಎಂದರು.
ವಿಧಾನ ಪರಿಷತ್ಗೆ ಸ್ಪರ್ಧಿಸಿರುವ ಅನಿಲ್ ಕುಮಾರ್ ಬಗ್ಗೆ ಏನೂ ಗೊತ್ತಿಲ್ಲ. ಈ ಬಗ್ಗೆ ನನ್ನ ಬಳಿ ಚರ್ಚಿಸಿಲ್ಲ. ಅಭ್ಯರ್ಥಿ ನಿಲ್ಲಿಸುವ ಬಗ್ಗೆ ಪಕ್ಷದಲ್ಲೂ ನಿರ್ಧಾರವಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.