ADVERTISEMENT

ಕತ್ತು ಕೊಯ್ದು ಪತ್ನಿಯ ಹತ್ಯೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2021, 16:28 IST
Last Updated 2 ಜನವರಿ 2021, 16:28 IST
ರಾಮ್ ಬಹದ್ದೂರ್
ರಾಮ್ ಬಹದ್ದೂರ್   

ಬೆಂಗಳೂರು: ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ಧೂಪಿದೇವಿ (47) ಎಂಬುವರನ್ನು ಕತ್ತು ಕೊಯ್ದು ಕೊಲೆ ಮಾಡಲಾಗಿದ್ದು, ಈ ಸಂಬಂಧ ಅವರ ಪತಿ ರಾಮ್ ಬಹದ್ದೂರ್ ಪಾಠಕ್ (50) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

‘ನೇಪಾಳದ ದಂಪತಿ, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಐಸ್‌ ಕ್ರೀಂ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಹೊರಮಾವು ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ದಂಪತಿಗೆ ಮೂವರು ಮಕ್ಕಳಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಮದ್ಯವ್ಯಸನಿಯಾಗಿದ್ದ ಆರೋಪಿ ರಾಮ್, ನಿತ್ಯವೂ ಕುಡಿದು ಮನೆಗೆ ಬಂದು ಪತ್ನಿ ಜೊತೆ ಗಲಾಟೆ ಮಾಡುತ್ತಿದ್ದರು. ಶುಕ್ರವಾರ ರಾತ್ರಿಯೂ ಆರೋಪಿ ಮದ್ಯ ಕುಡಿದು ಮನೆಗೆ ಬಂದು ಪತ್ನಿಗೆ ಬೈಯುತ್ತಿದ್ದರು. ಹಲ್ಲೆಗೂ ಯತ್ನಿಸಿದ್ದರು.’

ADVERTISEMENT

‘ಪತಿಯನ್ನು ಪ್ರಶ್ನಿಸಿದ್ದ ಧೂಪಿದೇವಿ, ಜಗಳ ಮಾಡಬೇಡಿ ಎಂದು ಗೋಳಾಡಿದ್ದರು. ಅಷ್ಟಕ್ಕೆ ಕೋಪಗೊಂಡ ಆರೋಪಿ, ಮನೆಯಲ್ಲಿದ್ದ ಚಾಕುವಿನಿಂದ ಪತ್ನಿಯ ಕತ್ತು ಕೊಯ್ದಿದ್ದರು. ಕುಸಿದು ಬಿದ್ದ ಧೂಪಿದೇವಿ, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಲಾಟೆ ಕಂಡು ಮಕ್ಕಳು ಚೀರಾಡುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದ್ದರು’ ಎಂದೂ ಪೊಲೀಸರು ತಿಳಿಸಿದರು.

‘ಕುಡಿದ ಅಮಲಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಹೇಳುತ್ತಿದ್ದಾನೆ. ದಂಪತಿಯ ಮೂರು ಮಕ್ಕಳು ಅನಾಥರಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.