ಬೆಂಗಳೂರು: ಅತಿವೃಷ್ಟಿಗೆ ತುತ್ತಾಗಿರುವ ಜನರಿಗೆ ಪರಿಹಾರ ಕಲ್ಪಿಸಲುತಕ್ಷಣ ಕೇಂದ್ರ ಸರ್ಕಾರ ನೆರವು ಪ್ರಕಟಿಸಬೇಕು. ಈ ಬಗ್ಗೆ ಒಂದೆರಡು ದಿನಗಳಲ್ಲಿ ನಿರ್ಧಾರ ಹೊರ ಬೀಳದಿದ್ದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಕೇಂದ್ರದ ಇಬ್ಬರು ಸಚಿವರು ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ನಂತರವೂ ಪರಿಹಾರ ನೀಡುವ ಮನಸ್ಸು ಮಾಡಿಲ್ಲ. ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಬಹುದು ಎಂಬ ನಿರೀಕ್ಷೆಯೂ ಹುಸಿಯಾಗಿದೆ. ಸಚಿವ ಸಂಪುಟದಲ್ಲಿ ರಾಜ್ಯದ ಸಚಿವರು ಇದ್ದರೂ ಪರಿಹಾರ ಪ್ರಕಟಿಸುವಂತೆ ಒತ್ತಡ ತಂದಿಲ್ಲ ಎಂದು ಆರೋಪಿಸಿದ್ದಾರೆ.
ಸಮಸ್ಯೆ ಉಲ್ಬಣಿಸಿ ಹತ್ತು ದಿನಗಳು ಕಳೆದಿದ್ದರೂ ಯಾವುದೇ ರೀತಿಯ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ. ಸಂತ್ರಸ್ತರಿಗೆ ನೆರವು ನೀಡಲು ಸರ್ಕಾರದ ಬಳಿ ಹಣ ಇಲ್ಲವಾಗಿದ್ದು, ಕೇಂದ್ರ ಸರ್ಕಾರ ತಕ್ಷಣ ₹5 ಸಾವಿರ ಕೋಟಿ ಬಿಡುಗಡೆ ಮಾಡಬೇಕು. ನಂತರದ ದಿನಗಳಲ್ಲಿ ವಿವರವಾದ ವರದಿ ಪಡೆದು ಉಳಿದ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಹಿಂದೆ ಇದೇ ರೀತಿಯಲ್ಲಿ ಅತಿವೃಷ್ಟಿ ಸಂಭವಿಸಿದ್ದ ಸಮಯದಲ್ಲಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ವೈಮಾನಿಕ ಸಮೀಕ್ಷೆ ನಡೆಸಿ, ₹1600 ಕೋಟಿ ನೆರವು ಪ್ರಕಟಿಸಿದ್ದರು. ಈಗ ಕೇಂದ್ರದ ನಾಯಕರು ಬಂದು ಹೋಗಿದ್ದರೂ ಪ್ರಯೋಜನವಾಗಿಲ್ಲ. ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಲ್ಲಿ ಇರುವಂತಹ ವಾತಾವರಣ ಕಂಡುಬಂದಿದೆ ಎಂದಿದ್ದಾರೆ.
ನಿಯೋಗಕ್ಕೆ ಆಗ್ರಹ: ಮುಖ್ಯಮಂತ್ರಿ ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ, ಕೇಂದ್ರಕ್ಕೆ ನಿಯೋಗ ಕರೆದೊಯ್ದು ಪರಿಹಾರ ಬಿಡುಗಡೆಗೆ ಒತ್ತಾಯಿಸಬೇಕು ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.
ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇದೆ ಎನಿಸುತ್ತಿಲ್ಲ. ಯಡಿಯೂರಪ್ಪ ಏಕಪಾತ್ರಾಭಿನಯ ಮಾಡುತ್ತಿದ್ದಾರೆ. ಮೊದಲು ಸರ್ಕಾರ ವಜಾ ಮಾಡಿ, ರಾಜ್ಯಪಾಲರ ಆಡಳಿತ ಜಾರಿಗೊಳಿಸಬೇಕು. ಇಲ್ಲವೆ ವಿಧಾನಸಭೆಯನ್ನು ಅಮಾನತಿನಲ್ಲಿ ಇಡಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಯಾವ ಪರಿಹಾರ ಕೇಂದ್ರದಲ್ಲೂ ಜನರಿಗೆ ನೆರವು ಸಿಗುತ್ತಿಲ್ಲ. ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕಲ್ಪಿಸಿಲ್ಲ. ಸಂತ್ರಸ್ತ ಜನರ ಜತೆಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.