
ಸಾಂದರ್ಭಿಕ ಚಿತ್ರ
ಬೆಂಗಳೂರು: ಗಾರ್ಮೆಂಟ್ಸ್ ಹಾಗೂ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಮಧ್ಯಾಹ್ನ ಮೊಟ್ಟೆ ಸಹಿತ ಪೌಷ್ಟಿಕ ಆಹಾರ ನೀಡಬೇಕು ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಮುನ್ನಡೆ ಸಾಮಾಜಿಕ ಸಂಸ್ಥೆ ಮತ್ತು ಸಿವಿಡೆಪ್ ಇಂಡಿಯಾ ಸಂಸ್ಥೆ ಸರ್ಕಾರಕ್ಕ ಮನವಿ ಮಾಡಿದೆ.
ಈ ಸಂಬಂಧ ಹೇಳಿಕೆ ನೀಡಿರುವ ಮುನ್ನಡೆ ಸಾಮಾಜಿಕ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ಎಚ್. ಯಶೋದಾ, ‘ಕೆಲಸದ ಒತ್ತಡದಿಂದಾಗಿ ಮಹಿಳಾ ಕಾರ್ಮಿಕರಿಗೆ ಪೌಷ್ಟಿಕ ಆಹಾರ ದೊರೆಯುತ್ತಿಲ್ಲ. ಇದರಿಂದ ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ದೀರ್ಘಾವಧಿ ಕೆಲಸ, ಕಡಿಮೆ ವೇತನ ಹಾಗೂ ಕೈಗೆಟುಕುವ ದರದಲ್ಲಿ ಆರೋಗ್ಯಕರ ಆಹಾರ ಪದಾರ್ಥಗಳು ದೊರೆಯುತ್ತಿಲ್ಲ’ ಎಂದು ತಿಳಿಸಿದ್ದಾರೆ.
‘ಕೆಲಸ ಸ್ಥಳದಲ್ಲಿ ಮೊಟ್ಟೆ ಸಹಿತ ಪೌಷ್ಟಿಕ ಆಹಾರ ನೀಡಬೇಕು. ಕ್ಯಾಂಟೀನ್ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ವಸತಿ ಸೌಕರ್ಯ ಹಾಗೂ ಪಡಿತರ ಚೀಟಿ ನೀಡಬೇಕು. ಅಲ್ಲದೇ ಕನಿಷ್ಠ ವೇತನವನ್ನು ಹೆಚ್ಚಳ ಮಾಡಬೇಕು’ ಎಂದು ಆಗ್ರಹಿಸಿದರು.
ಉಚಿತವಾಗಿ ಪ್ಯಾಡ್ ನೀಡುವುದರ ಜತೆಗೆ ಶೌಚಾಲಯ ಶುಚಿಯಾಗಿರುವಂತೆ ನೋಡಿಕೊಳ್ಳಬೇಕು. ಸರ್ಕಾರ ಮುಟ್ಟಿನ ರಜೆ ಘೋಷಿಸಿದ್ದು, ಅದು ಶೀಘ್ರ ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.