ADVERTISEMENT

ಮಲ್ಲೇಶ್ವರದಲ್ಲಿ ಕಾಮಗಾರಿ ವಿಳಂಬ: ಸ್ಥಳೀಯರ ಆರೋಪ

ಕಾಮಗಾರಿಗಳಿಂದ ನಾಗರಿಕರಿಗೆ ತೊಂದರೆ:

​ಪ್ರಜಾವಾಣಿ ವಾರ್ತೆ
Published 3 ಮೇ 2022, 3:59 IST
Last Updated 3 ಮೇ 2022, 3:59 IST
ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು
ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು   

ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳು ವಿಳಂಬವಾಗುತ್ತಿದ್ದು, ನಾಗರಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು ಭಾನುವಾರ ಪ್ರತಿಭಟನೆ ನಡೆಸಿದರು.

‘ಸ್ಯಾಂಕಿ ಕೆರೆ ಉಳಿಸಿ’, ‘ಗುಂಡಿಗಳ ನಗರ ಮಲ್ಲೇಶ್ವರ’, ‘ಕಳಪೆ ಕಾಮಗಾರಿ ನಿಲ್ಲಿಸಿ’ ಘೋಷಣೆಗಳಿದ್ದ ಭಿತ್ತಿಪತ್ರಗಳನ್ನು ಹಿಡಿದು ಸದಾಶಿವನಗರದ ಶಿವಾಜಿ ಪ್ರತಿಮೆಯಿಂದ ಸ್ಯಾಂಕಿ ಕೆರೆವರೆಗೂ ರ‍್ಯಾಲಿ ನಡೆಸಿದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದರು.

‘ನಡೆಯುತ್ತಿರುವ ಕಾಮಗಾರಿ ಕಳಪೆಯಾಗಿದೆ. ಟೆಂಡರ್‌ನಲ್ಲಿ ಅವ್ಯವಹಾರ ನಡೆದಿರುವ ಅನುಮಾನವಿದೆ. ಕಾಮಗಾರಿ ವಿಳಂಬದಿಂದಾಗಿ ಸ್ಥಳೀಯರು ಹಾಗೂ ವ್ಯಾಪಾರಿಗಳು ಸಂಕಷ್ಟ ಎದುರಿಸುವಂತಾಗಿದೆ’ ಎಂದು ಪ್ರತಿಭಟನಕಾರರು ದೂರಿದರು.

ADVERTISEMENT

‘ಸ್ಯಾಂಕಿ ಕೆರೆ ಅಭಿವೃದ್ಧಿ ನೆಪದಲ್ಲಿ 12 ವರ್ಷದಿಂದ ವಿವಿಧ ಕಾಮಗಾರಿಗಳು ನಡೆದಿವೆ. ಇನ್ನೂ ಪೂರ್ಣಗೊಂಡಿಲ್ಲ. ನಾಲ್ಕು ತಿಂಗಳಲ್ಲಿ ಎರಡು ಬಾರಿ ಪಾದಚಾರಿ ಮಾರ್ಗದ ಕಾಮಗಾರಿ ನಡೆಸಲಾಗಿದೆ’ ಎಂದು ಆರೋಪಿಸಿದರು.

‘ಒಬ್ಬನೇ ಗುತ್ತಿಗೆದಾರನಿಗೆ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಕಾಮಗಾರಿಗಳ ಟೆಂಡರ್‌ ನೀಡಲಾಗಿದೆ. ಇದು ಕೂಡಾ ವಿಳಂಬಕ್ಕೆ ಕಾರಣ. ಮಲ್ಲೇಶ್ವರ ಮುಖ್ಯರಸ್ತೆ ಹಾಗೂ ಪ್ಯಾಲೇಸ್‌ ಗುಟ್ಟಹಳ್ಳಿ ರಾಜಕಾಲುವೆ ಕಾಮಗಾರಿಯೂ ಮಂದಗತಿಯಲ್ಲಿ ಸಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಸ್ಥಳೀಯ ನಿವಾಸಿಅನೂಪ್ ಅಯ್ಯಂಗಾರ್ ದೂರಿದರು.

‘ಕ್ಷೇತ್ರದಲ್ಲಿ ನಡೆಯುತ್ತಿರುವ ಎಲ್ಲ ಕಾಮಗಾರಿಗಳ ಮಾಹಿತಿ ಸಾರ್ವಜನಿಕರಿಗೆ ಸಿಗುವಂತಾಗಬೇಕು. ಮೂರು ತಿಂಗಳಲ್ಲಿ ಕಾಮಗಾರಿಗಳನ್ನು ಮುಗಿಸಬೇಕು. ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಮುಂದೆ ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ’ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.