ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಾತಾವರಣ ವೈಪರೀತ್ಯದಿಂದ ಉಂಟಾಗುತ್ತಿರುವ ಪ್ರಕೃತಿ ವಿಕೋಪವನ್ನು ನಿಯಂತ್ರಿಸಲು ತಾಂತ್ರಿಕ ಹಾಗೂ ಆರ್ಥಿಕ ನೆರವು ನೀಡಲು ವಿಶ್ವಬ್ಯಾಂಕ್ ಆಸಕ್ತಿ ತೋರಿದೆ.
ಮಳೆ ನೀರಿನ ಸಮರ್ಪಕ ಉಪಯೋಗ, ಮಳೆಗಾಲದ ವೇಳೆಯಾಗುವಹಾನಿಯನ್ನು ತಡೆಯುವುದು, ಕೆರೆ ನೀರು ಬಳಕೆ, ರಾಜಕಾಲುವೆಗೆ ಒಳಚರಂಡಿಯ ನೀರು ಬಿಡದಂತೆ ತಡೆಯುವುದು, ಮಳೆಯ ನೀರನ್ನು ನಾಗರಿಕರ ಬಳಕೆಗೆ ಉಪಯೋಗವಾಗುವಂತೆ ಮಾಡಲು ಯೋಜನೆ ರೂಪಿಸುವುದು ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ವಿಶ್ವಬ್ಯಾಂಕ್ ಅಧಿಕಾರಿಗಳು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಎಂಜಿನಿಯರಿಂಗ್ ವಿಭಾಗದ ಪ್ರಧಾನ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಪ್ರಾತ್ಯಕ್ಷಿಕೆ ಮೂಲಕ ಹಲವು ವಿಷಯಗಳನ್ನು ವಿವರಿಸಿದರು.ವಿಶ್ವ ಬ್ಯಾಂಕ್ ಪ್ರತಿನಿಧಿಗಳು ಕೋರಮಂಗಲ ರಾಜಕಾಲುವೆ(ಕೆ-100) ಕೆ.ಆರ್.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಯವರೆಗಿನ 9.6 ಕಿ.ಮೀ ಉದ್ದದ ರಾಜಕಾಲುವೆಯಲ್ಲಿ ಜಲಮಾರ್ಗ ಯೋಜನೆ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿಶೇಷ ಆಯುಕ್ತ ಪಿ.ಎನ್.ರವೀಂದ್ರ ಇದ್ದರು.
ವಿಶ್ವ ಬ್ಯಾಂಕ್ ಪ್ರತಿನಿಧಿಗಳು ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರೊಂದಿಗೆ ರಾಜ್ಯ ವಿವಿಧ ವಲಯಗಳಲ್ಲಿ ವಾತಾವರಣದ ಸ್ಥಿತಿಸ್ಥಾಪಕತ್ವ ಕುರಿತಾದ ಸಂವಾದ ನಡೆಸಿದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೆಲ್ವ ಕುಮಾರ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.