ADVERTISEMENT

ಹೊಸ ಶಿಕ್ಷಣ ನೀತಿ ಅಂಗನವಾಡಿಗಳ ಪಾಲಿನ ನೇಣುಗಂಬ: ಸಾಹಿತಿ ವಡ್ಡಗೆರೆ ನಾಗರಾಜಯ್ಯ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2021, 11:34 IST
Last Updated 3 ಅಕ್ಟೋಬರ್ 2021, 11:34 IST
‘ಹೊಸ ಶಿಕ್ಷಣ ನೀತಿ’ ಅಂಗನವಾಡಿ ಕೇಂದ್ರಗಳ ಮೇಲಾಗುವ ಪರಿಣಾಮ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಾಹಿತಿ ಡಾ. ವಡ್ಡಗೆರೆ ನಾಗರಾಜಯ್ಯ ಮಾತನಾಡಿದರು. -ಪ್ರಜಾವಾಣಿ ಚಿತ್ರ
‘ಹೊಸ ಶಿಕ್ಷಣ ನೀತಿ’ ಅಂಗನವಾಡಿ ಕೇಂದ್ರಗಳ ಮೇಲಾಗುವ ಪರಿಣಾಮ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಾಹಿತಿ ಡಾ. ವಡ್ಡಗೆರೆ ನಾಗರಾಜಯ್ಯ ಮಾತನಾಡಿದರು. -ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಹೊಸ ಶಿಕ್ಷಣ ನೀತಿ ಅಂಗನವಾಡಿ ಕೇಂದ್ರಗಳ ಪಾಲಿನ ನೇಣುಗಂಬವಾಗಿದ್ದು, ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರು ಇದಕ್ಕೆ ಬಲಿಪಶುಗಳಾಗಬಾರದು. ಈ ನೇಣುಗಂಬವನ್ನು ನಾಶಮಾಡಲು ಸಜ್ಜಾಗಬೇಕು’ ಎಂದು ಸಾಹಿತಿ ವಡ್ಡಗೆರೆ ನಾಗರಾಜಯ್ಯ ಹೇಳಿದರು.

ಭಾನುವಾರ, ರಾಜ್ಯ ಅಂಗನವಾಡಿ ನೌಕರರ ಸಂಘ ಆಯೋಜಿಸಿದ್ದ, ‘ಹೊಸ ಶಿಕ್ಷಣ ನೀತಿ- ಅಂಗನವಾಡಿ ಕೇಂದ್ರಗಳ ಮೇಲಾಗುವ ಪರಿಣಾಮ’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ‘ಹೊಸ ಶಿಕ್ಷಣ ನೀತಿಯ ಅನುಸಾರ ಅಂಗನವಾಡಿ ಕೇಂದ್ರಗಳನ್ನು ಶಿಕ್ಷಣ ಇಲಾಖೆಯಲ್ಲಿ ವಿಲೀನಗೊಳಿಸಿದರೆ ಅಂಗನವಾಡಿ ಶಿಕ್ಷಕಿಯರು ಮತ್ತು ನೌಕರರು ಕೆಲಸ ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಈ ಶಿಕ್ಷಣ ನೀತಿಯ ವಿರುದ್ಧದ ಹೋರಾಟ ಅನಿವಾರ್ಯವಾಗಿದೆ’ ಎಂದರು.

‘ಸನಾತನವಾದಿ ಶಿಕ್ಷಣ ವ್ಯವಸ್ಥೆಗೆ ನಾಂದಿ ಹಾಡುವುದನ್ನು ತಡೆಯಬೇಕಿದೆ. ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಸಾವಿತ್ರಿ ಬಾಯಿ ಫುಲೆ ಅವರ ಕನಸಿನ ಶಿಕ್ಷಣ ನಮಗೆ ಬೇಕಿದೆ’ ಎಂದು ಪ್ರತಿಪಾದಿಸಿದರು.

ADVERTISEMENT

ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು) ಅಧ್ಯಕ್ಷೆ ಎಸ್.ವರಲಕ್ಷ್ಮಿ, ‘ಕೇಂದ್ರ ಸರ್ಕಾರ ರಾಜ್ಯಗಳ ಮೇಲೆ ಹೇರುತ್ತಿರುವ ಉದ್ದೇಶಿತ ನೀತಿಯಲ್ಲಿನ ಬಾಲವಾಟಿಕಾದಲ್ಲಿ ಅಂಗನವಾಡಿ ಪಠ್ಯಕ್ರಮ ಏಕಿಲ್ಲ’ ಎಂದು ಪ್ರಶ್ನಿಸಿ, ‘ಇದು ವಿಶ್ವ ಹಿಂದೂ ಪರಿಷತ್ ಪ್ರತಿಪಾದಿಸುವ ಮನುವಾದಿ ಶಿಕ್ಷಣ ನೀತಿಯಾಗಿದೆ’ ಎಂದು ಕಿಡಿ ಕಾರಿದರು.

ಜನವಾದಿ ಮಹಿಳಾ ಸಂಘಟನೆಯ ಉಪಾಧ್ಯಕ್ಷೆ ಕೆ.ಎಸ್.ವಿಮಲಾ, ‘ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ವಾಪಸು ಪಡೆಯಬೇಕು. ಐಸಿಡಿಎಸ್ ಯೋಜನೆಯನ್ನು ಕಾಯಂಗೊಳಿಸಿ 3ರಿಂದ 6 ವರ್ಷದ ಮಕ್ಕಳಿಗೆ ಉಚಿತ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.