ADVERTISEMENT

ಭೂಮಿ ಕಾಯ್ದಿರಿಸುವಂತೆ: ಸಿ.ಎಂ ಪತ್ರ ಬರೆದ ಶಾಸಕ ವಿಶ್ವನಾಥ್‌

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2019, 19:45 IST
Last Updated 15 ಅಕ್ಟೋಬರ್ 2019, 19:45 IST
ಎಸ್.ಆರ್. ವಿಶ್ವನಾಥ್ 
ಎಸ್.ಆರ್. ವಿಶ್ವನಾಥ್    

ಬೆಂಗಳೂರು:‘ನಗರವು ಬೃಹದಾಕಾರವಾಗಿ ಬೆಳೆಯುತ್ತಿದ್ದು, ಖಾಸಗಿ ಕಟ್ಟಡಗಳು ಎಲ್ಲೆಂದರಲ್ಲಿ ತಲೆ ಎತ್ತುತ್ತಿವೆ. ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರಿ ಜಾಗವನ್ನು ಕಾಯ್ದಿರಿಸಬೇಕು. ಅಗತ್ಯವಿರುವಲ್ಲಿ ಖಾಸಗಿ ಜಾಗವನ್ನೂ ಸ್ವಾಧೀನ ಮಾಡಿಕೊಳ್ಳಬೇಕು’ ಎಂದು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್‌ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಮೂಲಸೌಕರ್ಯ ಕ್ಷಮತೆಗಿಂತ ನೂರಾರು ಪಟ್ಟು ವೇಗದಲ್ಲಿ ನಗರ ಬೆಳೆಯುತ್ತಿದೆ. ಮೂಲಸೌಕರ್ಯ ವಿಸ್ತರಿಸುವ ಅಗತ್ಯವಿದೆ. ಇದಕ್ಕಾಗಿ ಸರ್ಕಾರಿ ಭೂಮಿಯನ್ನು ಗುರುತಿಸಬೇಕು. ಅಲ್ಲದೆ, ನಗರ ಜಿಲ್ಲಾಧಿಕಾರಿ ಬಳಿ ಸರ್ಕಾರಿ ಭೂಮಿ ಲಭ್ಯವಿದ್ದು, ಅದನ್ನು ಬಳಸಿಕೊಳ್ಳಬೇಕು. ಈಗ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಭೂಮಿಯ ಬೆಲೆ ಗಗನಕ್ಕೇರುತ್ತದೆ ಮತ್ತು ಸರ್ಕಾರವು ಖಾಸಗಿಯವರ ಹತ್ತಿರ ಭೂಸ್ವಾಧೀನಪಡಿಸಿಕೊಳ್ಳುವುದು ಸಾಧ್ಯವಾಗುವುದಿಲ್ಲ ಎಂದು ವಿಶ್ವನಾಥ್‌ ಹೇಳಿದ್ದಾರೆ.

‘ನಗರದ ಎಲ್ಲ ಸಚಿವರು, ಶಾಸಕರು ಹಾಗೂ ಸಂಸದರು ಮತ್ತು ಅಧಿಕಾರಿಗಳ ಸಭೆಯನ್ನು ಶೀಘ್ರ ಕರೆದು ಯೋಜನೆಗೆ ಚಾಲನೆ ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ADVERTISEMENT

‘ಮೆಟ್ರೊಗೆ ಕಚೇರಿ ಬೇಕು’: ‘ನಗರ ಮತ್ತು ಹೊರವಲಯದಲ್ಲಿ ಮೆಟ್ರೊ ರೈಲು ಪ್ರಯಾಣಿಕರ ಸಂಖ್ಯೆ ಭವಿಷ್ಯದಲ್ಲಿ ಇನ್ನೂ ಹೆಚ್ಚಾಗಲಿದೆ. ಹೀಗಾಗಿ, ಮುಂದಿನ 20 ವರ್ಷಗಳಲ್ಲಿ ‘ನಮ್ಮ ಮೆಟ್ರೊ’ ವಿಸ್ತರಣೆ ಅಗತ್ಯ’ ಎಂದು ವಿಶ್ವನಾಥ್‌ ಹೇಳಿದ್ದಾರೆ.

‘ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ ಪ್ರಧಾನ ಕಚೇರಿಯ ಅಗತ್ಯವಿದೆ. ಈ ಉದ್ದೇಶಕ್ಕೂ ಭೂಮಿ ಮೀಸಲಿಡಬೇಕು’ ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.