ಯಲಹಂಕ: ಬೆಂಗಳೂರು ಉತ್ತರ ಹಾಗೂ ಯಲಹಂಕ ತಾಲ್ಲೂಕು ಕಚೇರಿಗಳ ಕಡತ ವಿಲೇವಾರಿ ಅಭಿಯಾನ ಏ.1ರಿಂದ 12ರವರೆಗೆ ನಡೆಯಲಿದೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ತಿಳಿಸಿದರು.
ತಾಲ್ಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ‘ಈ ಎರಡೂ ತಾಲ್ಲೂಕು ಕಚೇರಿಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟ ಪ್ರಕರಣಗಳು ಬಾಕಿ ಇದ್ದು, ತಡಮಾಡದೆ ಇತ್ಯರ್ಥಪಡಿಸುವಂತೆ ವಿಷಯ ಸೂಚಕರಿಗೆ ಸೂಚನೆ ನೀಡಲಾಗಿದೆ’ ಎಂದರು.
‘ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಕಚೇರಿಗಳಿಗೆ ಅಲೆದಾಡುತ್ತಿರುವುದು ಮತ್ತು ಪ್ರಕರಣಗಳನ್ನು ಇತ್ಯರ್ಥಪಡಿಸಲು ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿರುವ ಕಾರಣ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.
ಬೆಳಿಗ್ಗೆ 9.30ರಿಂದ ಸಂಜೆ 6.30ರವರೆಗೆ ಈ ಅಭಿಯಾನ ನಡೆಯಲಿದ್ದು, ಈ ಅವಧಿಯಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅತಿಜರೂರು ಸಂದರ್ಭಗಳಲ್ಲಿ ಮಾತ್ರ ಶಿರಸ್ತೇದಾರ್ ಅವರನ್ನು ಭೇಟಿ ಮಾಡಬಹುದಾಗಿದೆ ಎಂದು ವಿಶ್ವನಾಥ್ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.