ಯಲಹಂಕ: ಲೋಕೋಪಯೋಗಿ ಹಾಗೂ ಬಿಡಿಎ ಅನುದಾನದಡಿಯಲ್ಲಿ ಯಲಹಂಕ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ₹38 ಕೋಟಿ ವೆಚ್ಛದಲ್ಲಿ ಕೈಗೊಂಡಿರುವ ಪ್ರಮುಖ ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಬೈರಾಪುರ ಗ್ರಾಮದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ‘ಹಳ್ಳಿ-ಹಳ್ಳಿಗಳ ನಡುವಿನ ಸಂಪರ್ಕ ರಸ್ತೆಗಳು ತೀರಾ ಹಾಳಾಗಿದ್ದು, ರಸ್ತೆಗಳು ಕಿರಿದಾಗಿವೆ. ಇದರಿಂದ ವಾಹಗಳ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಹೀಗಾಗಿ ರಸ್ತೆಯ ಎರಡೂ ಕಡೆ ಸೇರಿ ಒಟ್ಟು 7 ಅಡಿಗಳಷ್ಟು ವಿಸ್ತರಣೆ ಮಾಡಲಾಗುತ್ತಿದೆ. ಅದಕ್ಕನುಗುಣವಾಗಿ ಚರಂಡಿ ನಿರ್ಮಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿಪಡಿಸಲಾಗುತ್ತದೆ. ಈ ಎಲ್ಲ ಕಾಮಗಾರಿಗಳಿಗೆ ಈಗ ಚಾಲನೆ ನೀಡಲಾಗಿದೆ’ ಎಂದು ತಿಳಿಸಿದರು.
‘ರಾಜಾನುಕುಂಟೆ-ಮಧುರೆ ಮುಖ್ಯರಸ್ತೆಯು ತೀರಾ ಹಾಳಾಗಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನಿಸಿದ್ದೇನೆ. ಕೆಎಸ್ಆರ್ಡಿಸಿ ವತಿಯಿಂದ ರಸ್ತೆ ಅಭಿವೃದ್ಧಿಯಾಗಬೇಕಾಗಿದೆ. ಈ ಸಂಬಂಧ ಸಂಸ್ಥೆಯ ಅಧ್ಯಕ್ಷ ಎಚ್.ಸಿ.ಬಾಲಕೃಷ್ಣ ಹಾಗೂ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆಯನ್ನೂ ನಡೆಸಲಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳಿಂದ ಸಮೀಕ್ಷೆ ಕಾರ್ಯವನ್ನೂ ನಡೆಸಲಾಗಿದೆ. ರೈತರಿಗೆ ಪರಿಹಾರ ನೀಡುವುದು ವಿಳಂಬವಾಗುತ್ತಿದ್ದು, ಇದರಿಂದ ರಸ್ತೆಗೆ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸಮಸ್ಯೆಯಾಗುತ್ತಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಕಾಮಗಾರಿ ಆರಂಭಿಸಲಾಗುವುದು’ ಎಂದರು.
ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಸತೀಶ್ ಕಡತನಮಲೆ, ಡಿ.ಜಿ.ಅಪ್ಪಯಣ್ಣ, ರಾಮಮೂರ್ತಿ, ಅದ್ದೆ ವಿಶ್ವನಾಥಪುರ ಮಂಜುನಾಥ್, ಎಸ್.ಜಿ.ಪ್ರಶಾಂತ್ರೆಡ್ಡಿ, ಕೆ.ಸಿ.ಬಾಬು, ಎಂ.ಮೋಹನ್ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಂತಮ್ಮ, ಸಂಜೀವಯ್ಯ, ಅಮರಾವತಮ್ಮ, ಮಾಜಿ ಅಧ್ಯಕ್ಷ ಕೆ.ಆರ್.ತಿಮ್ಮೇಗೌಡ, ಮಾಜಿ ಉಪಾಧ್ಯಕ್ಷ ಹೇಮಂತ್ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.