ADVERTISEMENT

ಯೋಗ ವಿಜ್ಞಾನ ಕೇಂದ್ರದ ವಾರ್ಷಿಕೋತ್ಸವ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2019, 19:59 IST
Last Updated 3 ಫೆಬ್ರುವರಿ 2019, 19:59 IST

ಬೆಂಗಳೂರು: ಯೋಗಕ್ಕೆ ದೇಹದ ಸಕಲ ಇಂದ್ರಿಯಗಳನ್ನು ನಿಗ್ರಹಿಸುವ ಶಕ್ತಿಯಿದೆ. ಇದನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮನುಷ್ಯ ಜನ್ಮವನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.

ಯಲಹಂಕ ಉಪನಗರದಲ್ಲಿರುವ ಯೋಗ ವಿಜ್ಞಾನ ಕೇಂದ್ರದ ವಾರ್ಷಿಕೋತ್ಸವ ಮತ್ತು ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಯೋಗ ನಮ್ಮ ಖುಷಿಮುನಿಗಳು ತಪಸ್ಸಿನಿಂದ ಆವಿಷ್ಕರಿಸಿದ ಒಂದು ಅದ್ಭುತ ಕಲೆ. ಆಧುನಿಕ ಯುಗದಲ್ಲಿ ದುಡಿಯುವ ಭರಾಟೆಯಲ್ಲಿ ಮನುಷ್ಯನು ಯಾಂತ್ರಿಕ ಜೀವನ ನಡೆಸುತ್ತಿದ್ದು, ಇದರಿಂದ ಹೊರಬಂದು ನೆಮ್ಮದಿಯ ಜೀವನ ನಡೆಸಲು ಯೋಗ ಅಗತ್ಯ’ ಎಂದರು.

ADVERTISEMENT

‘ವಿದೇಶಿಯರು ಯೋಗದ ಮಹಿಮೆ ಕಂಡುಕೊಂಡಿದ್ದಾರೆ. ಆದರೆ ನಮ್ಮ ದೇಶದ ಜನರು ಯೋಗವನ್ನು ಅಳವಡಿಸಿಕೊಳ್ಳುವ ಮೂಲಕ ಸಮೃದ್ಧ ಬದುಕನ್ನು ನಡೆಸುವುದು ಅತ್ಯಗತ್ಯ’ ಎಂದರು.

ಯೋಗ ವಿಜ್ಞಾನ ಕೇಂದ್ರದ ಅಧ್ಯಕ್ಷ ಗೋಪಾಲಕೃಷ್ಣ ಹೆಗಡೆ ಮಾತನಾಡಿ, ‘ಯೋಗದ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣ ಮಾಡುವುದು ನಮ್ಮ ಸಂಸ್ಥೆಯ ಉದ್ದೇಶ. ಈ ನಿಟ್ಟಿನಲ್ಲಿ ಕಳೆದ 6 ವರ್ಷಗಳಿಂದ ಯೋಗ, ಪ್ರಾಣಾಯಾಮ ಸೇರಿದಂತೆ ಮನೋದೈಹಿಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಹೆಚ್ಚಿನ ಸೇವೆ ಒದಗಿಸುವ ಉದ್ದೇಶದಿಂದ ನೂತನ ಕಟ್ಟಡದಲ್ಲಿ ಯೋಗ ತರಬೇತಿ ನೀಡಲು ನಿರ್ಧರಿಸಲಾಗಿದೆ’ ಎಂದರು.

ಯೋಗಶಿಕ್ಷಕರ ತರಬೇತಿ ಪಡೆದವರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಬಿಬಿಎಂಪಿ ಸದಸ್ಯ ಎಂ.ಸತೀಶ್, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.