ADVERTISEMENT

ಸಿಲಿಂಡರ್‌ ಹಿಡಿದು ಯುವ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 22:39 IST
Last Updated 2 ಸೆಪ್ಟೆಂಬರ್ 2021, 22:39 IST
ಅಡುಗೆ ಅನಿಲ ದರ ಏರಿಕೆ ಖಂಡಿಸಿ ಸಿಲಿಂಡರ್ ಹಿಡಿದು ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಬಿ.ವಿ. ಶ್ರೀನಿವಾಸ್, ಮೊಹಮದ್ ನಲಪಾಡ್, ಎಂ.ಎಸ್. ರಕ್ಷಾ ರಾಮಯ್ಯ ಭಾಗವಹಿಸಿದ್ದರು – ಪ್ರಜಾವಾಣಿ ಚಿತ್ರ
ಅಡುಗೆ ಅನಿಲ ದರ ಏರಿಕೆ ಖಂಡಿಸಿ ಸಿಲಿಂಡರ್ ಹಿಡಿದು ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಬಿ.ವಿ. ಶ್ರೀನಿವಾಸ್, ಮೊಹಮದ್ ನಲಪಾಡ್, ಎಂ.ಎಸ್. ರಕ್ಷಾ ರಾಮಯ್ಯ ಭಾಗವಹಿಸಿದ್ದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ಅಡುಗೆ ಅನಿಲ, ಪೆಟ್ರೋಲಿಯಂ ಉತ್ಪನ್ನಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಆನಂದ ರಾವ್ ವೃತ್ತದ ಬಳಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಗುರುವಾರ ಪ್ರತಿಭಟನಾ ಜಾಥಾ ನಡೆಯಿತು.

ಪ್ರತಿಭಟನೆಯ ನೇತೃತ್ವವನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತು ರಾಜ್ಯ ಘಟಕದ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ವಹಿಸಿದ್ದರು. 100 ಅಡಿ ಉದ್ದದ ಸಿಲಿಂಡರ್‌ನ ಬಾವುಟ ಹಿಡಿದು ಕಾಂಗ್ರೆಸ್ ಭವನದಿಂದ ಹೊರಟ ಜಾಥಾ ಆನಂದ ರಾವ್ ವೃತ್ತದ ಮೇಲ್ಸೇತುವೆಯಿಂದ ಮೌರ್ಯ ವೃತ್ತದ ಗಾಂಧಿ ಪ್ರತಿಮೆವರೆಗೆ ನಡೆಯಿತು.

ಅಡುಗೆ ಅನಿಲ ಸಿಲಿಂಡರ್‌ಗಳನ್ನು ಹಿಡಿದು ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ADVERTISEMENT

‘ಒಂದೆಡೆ ಉಜ್ವಲ ಯೋಜನೆಯಡಿ ಉಚಿತ ಸಿಲಿಂಡರ್‌ ನೀಡಿ, ಮತ್ತೊಂದೆಡೆ ಅಡುಗೆ ಸಿಲಿಂಡರ್ ದರ ಗಣನೀಯವಾಗಿ ಏರಿಕೆ ಮಾಡುತ್ತಿದೆ. ಮನಮೋಹನ್ ಸಿಂಗ್ ಕಾಲದಲ್ಲಿ ₹ 400 ಇದ್ದ ಸಿಲಿಂಡರ್ ಬೆಲೆ ಇದೀಗ ₹ 900ಗೆ ತಲುಪಿದೆ. ಬೆಲೆ ಇಳಿಸದಿದ್ದರೆ ಬಿಜೆಪಿ ಸಚಿವರು, ಸಂಸದರು, ಶಾಸಕರು ಹೀಗೆ ಎಲ್ಲರನ್ನೂ ಘೇರಾವ್ ಮಾಡಿ ಹೋರಾಟ ತೀವ್ರಗೊಳಿಸುತ್ತೇವೆ’ ಎಂದು ಬಿ.ವಿ. ಶ್ರೀನಿವಾಸ್ ಎಚ್ಚರಿಸಿದರು.

ರಕ್ಷಾ ರಾಮಯ್ಯ ಮಾತನಾಡಿ, ‘ಬಿಜೆಪಿ ನಾಯಕರು ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯಿಂದಾಗಿ ಜನ ಸಾಮಾನ್ಯರು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜನರಿಗೆ ಉದ್ಯೋಗ ಸೃಷ್ಟಿಯಾಗಿಲ್ಲ. ಇರುವ ಉದ್ಯೋಗವೂ ನಷ್ಟವಾಗಿದೆ. ಮುಂದಿನ 15 ದಿನಗಳ ಒಳಗಾಗಿ ಬೆಲೆ ಇಳಿಕೆ ಆಗದಿದ್ದರೆ ರಾಜ್ಯದ ಮೂಲೆ ಮೂಲೆಗಳಲ್ಲಿ ಯುವ ಕಾಂಗ್ರೆಸ್ ‌ಹೋರಾಟ ನಡೆಸಲಿದೆ’ ಎಂದು ಎಚ್ಚರಿಕೆ ನೀಡಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.