
ಸಾವು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರ ನಾಲ್ಕನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭಾರತೀನಗರ ನಿವಾಸಿ ಇರ್ಫಾನ್ ಮುಲ್ಲಾನಿ(26) ಮೃತ ಯುವಕ. ಜ.30ರಂದು ಘಟನೆ ನಡೆದಿದ್ದು, ಇರ್ಫಾನ್ ಮುಲ್ಲಾನಿ ಕುಟುಂಬದ ಸದಸ್ಯರು ಕೊಲೆ ಆರೋಪ ಮಾಡಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಭಾರತೀನಗರ ಠಾಣೆ ಪೊಲೀಸರು ಮಾಹಿತಿ ನೀಡಿದರು.
ಇರ್ಫಾನ್ ಮುಲ್ಲಾನಿ ಅವರು ಚಿನ್ನದ ಮಾರಾಟದ ವ್ಯವಹಾರ ಮಾಡುತ್ತಿದ್ದರು. ಜ.30ರಂದು ಭಾರತೀನಗರದ ಹಣ್ಣಿನ ಮಾರುಕಟ್ಟೆ ಸಮೀಪದಲ್ಲಿರುವ ತನ್ನ ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಹೋಗಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಅಲ್ಲಿಂದ ಬಿದ್ದಿದ್ದಾರೆ. ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.
‘ತಮ್ಮ ಪುತ್ರನನ್ನು ಮಹಡಿಯಿಂದ ತಳ್ಳಿ ಕೊಲೆ ಮಾಡಲಾಗಿದೆ’ ಎಂದು ಆರೋಪಿಸಿ ಇರ್ಫಾನ್ ಮುಲ್ಲಾನಿ ಪೋಷಕರು ದೂರು ನೀಡಿದ್ದಾರೆ.
ಪ್ರಾಥಮಿಕ ತನಿಖೆ ನಡೆಸಲಾಗಿದ್ದು, ಇರ್ಫಾನ್ ಮುಲ್ಲಾನಿ ಅವರೊಬ್ಬರೇ ನಾಲ್ಕನೇ ಮಹಡಿಗೆ ಹೋಗಿದ್ದಾರೆ ಎಂಬುದು ಕಂಡುಬಂದಿದೆ ಎಂದು ಪೊಲೀಸರು ಹೇಳಿದರು. ಭಾರತೀನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.