
ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ಬೆಂಗಳೂರು: ಯುವತಿಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುತ್ತುರಾಜು ಉರುಫ್ ಸೂರ್ಯ ಎಂಬ ಯೂಟ್ಯೂಬರ್ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಣನಕುಂಟೆಯ ಆದರ್ಶ ನಗರದಲ್ಲಿ ವಾಸವಾಗಿರುವ ಮುತ್ತುರಾಜು, ವಿ-2 ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದಾರೆ. ಇದೇ ಯೂಟ್ಯೂಬ್ ಚಾನೆಲ್ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಹಲ್ಲೆ ನಡೆಸಿ, ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಮುತ್ತುರಾಜು, ನನ್ನ ಫೇಸ್ಬುಕ್, ಜಿ-ಮೇಲ್ ಹಾಗೂ ಇನ್ಸ್ಟಾಗ್ರಾಮ್ ಖಾತೆಯನ್ನು ದುರ್ಬಳಕೆ ಮಾಡಿಕೊಂಡು ವೈಯಕ್ತಿಕ ಫೋಟೊಗಳನ್ನು ಕಳವು ಮಾಡಿದ್ದಾರೆ. ಈ ವಿಚಾರ ಗೊತ್ತಾಗಿ ವಿಚಾರಿಸಲು ಅವರ ಮನೆಗೆ ಹೋದಾಗ, ನನ್ನ ಮೇಲೆ ಹಲ್ಲೆ ನಡೆಸಿ, ಖಾಸಗಿ ಅಂಗಾಂಗಗಳನ್ನು ಮುಟ್ಟಿ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ, ನನ್ನ ಮೊಬೈಲ್ ಮತ್ತು ಕೈಗಡಿಯಾರ ಕಿತ್ತುಕೊಂಡು ಹಾಳು ಮಾಡಿದ್ದಾರೆ’ ಎಂದು ಸಂತ್ರಸ್ತ ಯುವತಿಯು ದೂರಿನಲ್ಲಿ ಆರೋಪಿಸಿದ್ದಾರೆ.
‘ವೈಯಕ್ತಿಕ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಜತೆಗೆ, ಕುಟುಂಬ ಸದಸ್ಯರಿಗೆ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ’ ಎಂದು ಸಂತ್ರಸ್ತೆಯು ದೂರಿನಲ್ಲಿ ಹೇಳಿದ್ದಾರೆ.
ಹಲ್ಲೆ, ದೌರ್ಜನ್ಯ, ಮಹಿಳೆಯ ಗೌರವಕ್ಕೆ ಧಕ್ಕೆ ತಂದಿರುವುದು, ಬೆದರಿಕೆ ಆರೋಪದಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧ 7 ದಿನದೊಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಬರದಿದ್ದರೆ ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.