ADVERTISEMENT

ಅಂಗನವಾಡಿ ಕಾರ್ಯಕರ್ತೆಯರಿಂದ ರಸ್ತೆತಡೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2011, 18:20 IST
Last Updated 2 ಫೆಬ್ರುವರಿ 2011, 18:20 IST

ಬೀದರ್: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ವಾವಲಂಬನಾ ರಾಷ್ಟ್ರೀಯ ಪಿಂಚಣಿ ಯೋಜನೆ ಜಾರಿಗೊಳಿಸುವುದನ್ನು ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರು ನಗರದಲ್ಲಿ ಬುಧವಾರ ರಸ್ತೆ ತಡೆ ಚಳವಳಿ ನಡೆಸಿದರು.

ಮಧ್ಯಾಹ್ನ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತೆಯರು ಮಾನವ ಸರಪಳಿ ರಚಿಸಿ ಸುಮಾರು 15 ನಿಮಿಷಗಳ ಕಾಲ ರಸ್ತೆ ತಡೆ ಮಾಡಿದರು. ನಂತರ ನಗರದ ಜಿಲ್ಲಾ ಪಂಚಾಯಿತಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾ ಪಂಚಾಯಿತಿಗೆ ಮುತ್ತಿಗೆ ಹಾಕಲು ಉದ್ದೇಶಿಸಿದ್ದ ಹಿನ್ನೆಲೆಯಲ್ಲಿ ಮುಂಚಿತವಾಗಿಯೇ ಕಚೇರಿಗೆ ಬಾಗಿಲು ಹಾಕಲಾಗಿತ್ತು. ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಕೆಲಕಾಲ ಪ್ರತಿಭಟನೆಯ ನಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿತೇಂದ್ರ ನಾಯಕ್ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು.

ಕಾರ್ಯಕರ್ತೆಯರಿಗೆ ಕನಿಷ್ಠ 6 ಸಾವಿರ ವೇತನ ನಿಗದಿಪಡಿಸಬೇಕು. ಮತ್ತು ಸಂಬಳದ ಅರ್ಧದಷ್ಟು ಪಿಂಚಣಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಬಕಲಾದೇವಿ, ಪ್ರಧಾನ ಕಾರ್ಯದರ್ಶಿ ಎಸ್. ಶ್ರೀದೇವಿ, ಪ್ರಮುಖರಾದ ಸುಶೀಲಾ ಹತ್ತಿ, ಸುಲೋಚನಾದೇವಿ, ವಿದ್ಯಾವತಿ, ಅಂಜನಾಬಾಯಿ, ಸರೋಜನಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.