ಔರಾದ್: ರಾಜ್ಯದ ವಿವಿಧ ಭಾಷಾ ಅಲ್ಪಸಂಖ್ಯಾತ ಕಾಲೇಜು ವೈದ್ಯಕೀಯ ಸೀಟು ಹಂಚಿಕೆಯಲ್ಲಿನ ಅಕ್ರಮ ಖಂಡಿಸಿ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದರು.
ವಿವಿಧ ಕಾಲೇಜು ವಿದ್ಯಾರ್ಥಿಗಳು ಪಟ್ಟಣದ ಕನ್ನಡಾಂಬೆ ವೃತ್ತದ ಬಳಿ ಜಮಾಯಿಸಿ ಕೆಲಕಾಲ ರಸ್ತೆತಡೆ ನಡೆಸಿದರು.
ರಾಜ್ಯದ ಭಾಷಾ ಅಲ್ಪಸಂಖ್ಯಾತ ಕಾಲೇಜುಗಳು ವೈದ್ಯಕೀಯ ಪ್ರವೇಶ ನೀಡುವಲ್ಲಿ ಅಕ್ರಮ ನಡೆಸಿವೆ. ಈ ಬಗ್ಗೆ ಸರ್ಕಾರ ಮೌನ ವಹಿಸಿ ಅಕ್ರಮ ಮುಚ್ಚುವ ಹುನ್ನಾರ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಈ ಕುರಿತು ಸಿಒಡಿಯಿಂದ ತನಿಖೆ ನಡೆಸಬೇಕು. ಎಲ್ಲ ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸೀಟು ಹಂಚಿಕೆ ಸಿಇಟಿ ಮೂಲಕ ನಡೆಸಬೇಕು.
ಪ್ರಕರಣ ಸಂಬಂಧ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದು ಕಡ್ಡಾಯ ರಜೆ ಮೇಲೆ ಕಳುಹಿಸಿದ ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿಯನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿ, ತಹಶೀಲ್ದಾರ್ ವೆಂಕಣ್ಣ ಅವರಿಗೆ ಮನವಿ ಸಲ್ಲಿಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಅಶೋಕ ಶೆಂಬೆಳ್ಳಿ, ಅರುಣ ಪಾಟೀಲ, ಅಂಬಾದಾಸ ನೇಳಗೆ, ಬಸವರಾಜ ಹಳ್ಳೆ, ಹಾವಪ್ಪ ದ್ಯಾಡೆ, ಸಿದ್ದು ಪಾಟೀಲ, ಅನಿಲ ಮೇತ್ರೆ, ರಮೇಶ, ಆಕಾಶ ಸ್ವಾಮಿ, ಸಚಿನ್ ಚಿದ್ರೆ, ಸಚಿನ್ ಸಿಂಧೆ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.