ADVERTISEMENT

ಆಗಸ್ಟ್‌ನಲ್ಲಿ ಹಣ್ಣು, ತರಕಾರಿ ಮಾರುಕಟ್ಟೆ ಆರಂಭ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2011, 9:55 IST
Last Updated 3 ಮಾರ್ಚ್ 2011, 9:55 IST

ಬೀದರ್: ಬರುವ ಆಗಸ್ಟ್‌ನಲ್ಲಿ ಬೀದರ್‌ನಲ್ಲಿ ಹಣ್ಣು ಮತ್ತು ತರಕಾರಿ ಮಾರುಕಟ್ಟೆ ಪ್ರಾರಂಭಿಸಲಾಗುತ್ತದೆ ಎಂದು ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.ವಿಧಾನ ಪರಿಷತ್ ಸದಸ್ಯ ಕಾಜಿ ಅರ್ಷದ್ ಅಲಿ ಅವರ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.

ಜೂನ್‌ನಿಂದ ಅಕ್ಟೋಬರ್‌ವರೆಗೆ ಅಧಿಕ ಮಳೆಯಾದ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮಾರುಕಟ್ಟೆ ಕಾಮಗಾರಿಗೆ ವಿಳಂಬವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಹಣ್ಣು ಮತ್ತು ತರಕಾರಿ ಮಾರುಕಟ್ಟೆ ನಿರ್ಮಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿ ಬೀದರ್‌ನೊಂದಿಗೆ ಔರಾದ್ ಪಟ್ಟಣದಲ್ಲಿಯು ಹಣ್ಣು ಮತ್ತು ತರಕಾರಿ ಮಾರುಕಟ್ಟೆ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ಬೀದರ್‌ನಲ್ಲಿ ಮೂರು ವರ್ಷಗಳ ಹಿಂದೆ ರೈತರ ಸಂತೆ ಆರಂಭಿಸಲಾಗಿದೆ. ರೈತರಿಗೆ ಗುರುತಿನ ಚೀಟಿ ಹಾಗೂ ಎಲ್ಲ ಮೂಲಸೌಕರ್ಯ ಒದಗಿಸಲಾಗಿದೆ. ಅದಾಗಿಯು ರೈತರು ಸ್ವಇಚ್ಛೆಯಿಂದ ಸಂತೆಗೆ ಬರದ ಕಾರಣ ರೈತ ಸಂತೆ ನಿಯಮಿತವಾಗಿ ನಡೆಯುತ್ತಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ.

 ಸೇತುವೆ ನಿರ್ಮಾಣ: ಮಾಂಜ್ರಾ ನದಿಗೆ ಅಡ್ಡಲಾಗಿ ಭಾಲ್ಕಿ ತಾಲ್ಲೂಕಿನ ಸಾಯಗಾಂವ್ ಗ್ರಾಮದ ಬಳಿ 5.40 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತು ಔರಾದ್ ತಾಲ್ಲೂಕಿನ ಸಂಗಮ ಗ್ರಾಮದ ಹತ್ತಿರ 10 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣದ ಅಂದಾಜು ಸರ್ಕಾರದ ಪರಿಶೀಲನೆಯಲ್ಲಿದೆ. ಅನುದಾನದ ಲಭ್ಯತೆ ಆಧಾರದ ಮೇಲೆ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರ್ಷದ್ ಅಲಿ ಅವರ ಇನ್ನೊಂದು ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ ಹೇಳಿದ್ದಾರೆ.

371 ಕೋಟಿ ಬೆಳೆ ಪರಿಹಾರ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ರೈತರಿಗೆ ಒಟ್ಟು 371 ಕೋಟಿ 54 ಲಕ್ಷ ರೂಪಾಯಿ ಬೆಳೆ ವಿಮಾ ಪರಿಹಾರ ಒದಗಿಸಲಾಗಿದೆ ಎಂದು ಕೃಷಿ ಸಚಿವ ಉಮೇಶ ಕತ್ತಿ ಅವರು ಕಾಜಿ ಅರ್ಷದ್ ಅಲಿ ಅವರ ಮತ್ತೊಂದು ಪ್ರಶ್ನೆಗೆ ನೀಡಿರುವ ಉತ್ತರದಲ್ಲಿ ತಿಳಿಸಿದ್ದಾರೆ.ರಾಷ್ಟ್ರೀಯ ಕೃಷಿ ವಿಮಾ ಯೋಜನೆ ಅಡಿಯಲ್ಲಿ 346 ಕೋಟಿ 9 ಲಕ್ಷ ರೂಪಾಯಿ ಮತ್ತು ಪ್ರಾಯೋಗಿಕ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಅಡಿಯಲ್ಲಿ 25 ಕೋಟಿ 45 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ.

ಮೂರು ವರ್ಷಗಳ ಅವಧಿಯಲ್ಲಿ ಬೀದರ್ ಜಿಲ್ಲೆಯ ರೈತರಿಗೆ ಒಟ್ಟು 5 ಕೋಟಿ 10 ಲಕ್ಷ ರೂಪಾಯಿ ಪರಿಹಾರ ಕಲ್ಪಿಸಲಾಗಿದೆ. ಈ ಪೈಕಿ 2007-08 ರಲ್ಲಿ 2 ಕೋಟಿ 13 ಲಕ್ಷ, 2008-09 ರಲ್ಲಿ 55 ಲಕ್ಷದ 54 ಸಾವಿರ ಮತ್ತು 2009-10 ರಲ್ಲಿ 2 ಕೋಟಿ 41 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗಿದೆ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.