ADVERTISEMENT

ಉದ್ಯೋಗ ಆರಂಭಿಸಲು ನೆರವು: ಸರೋಜಿನಿ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2011, 6:45 IST
Last Updated 12 ಫೆಬ್ರುವರಿ 2011, 6:45 IST

ಬೀದರ್: ಸ್ವಯಂ ಉದ್ಯೋಗ ಆರಂಭಿಸಲು ಮಹಿಳೆಯರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ ಎಲ್ಲ ನೆರವು ಒದಗಿಸಲಾಗುವುದು ಎಂದು ನಿಗಮದ ಅಧ್ಯಕ್ಷೆ ಸರೋಜಿನಿ ಭಾರದ್ವಾಜ ತಿಳಿಸಿದರು.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಉದ್ಯೋಗಿನಿ ಯೋಜನೆಯಡಿ ಸಹಾಯಧನ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉದ್ಯೋಗ ಆರಂಭಿಸಲು ಮಹಿಳೆಯರಿಗೆ ತರಬೇತಿಗಳನ್ನು ನೀಡಲಾಗುವುದು. ಸಾಲ ಯೋಜನೆಗಳ ಮೂಲಕ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಸಲು ಮತ್ತು ಉತ್ಪನ್ನ ಸರಕುಗಳಿಗೆ ಮಾರುಕಟ್ಟೆ ಒದಗಿಸಲು ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಗಳನ್ನು ಪ್ರತಿ ಜಿಲ್ಲೆಯಲ್ಲಿ ಆಯೋಜಿಸಲಾಗುವುದು. ಮಹಿಳೆಯರು ತಯಾರಿಸಿದ ವಸ್ತುಗಳನ್ನು ಸರ್ಕಾರಿ ವಸತಿ ನಿಲಯಗಳಿಗೆ ಪೂರೈಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಮಹಿಳೆಯರು ಸಣ್ಣ ಪ್ರಮಾಣದ ವ್ಯಾಪಾರಿ ಚಟುವಟಿಕೆಗಳನ್ನು ನಡೆಸಲು ಕಿರು ಸಾಲ ಯೋಜನೆ ಎಂಬ ನೂತನ ಯೋಜನೆಯನ್ನು ಅನುಷ್ಠಾನದಲ್ಲಿ ತರಲಾಗುತ್ತಿದ್ದು.  ಮಹಿಳೆಯರಿಗೆ ಶೇ. 6 ಬಡ್ಡಿ ದರದಲ್ಲಿ ಸಾಲ ಒದಗಿಸಲಾಗುವುದು. ಅಲ್ಲದೇ ಗೋಮಾತಾ ಯೋಜನೆಯಡಿ ಹಸು ಕೊಂಡುಕೊಂಡು ಹೈನುಗಾರಿಕೆಯನ್ನು ನಿರ್ವಹಿಸಲು ನೆರವು ನೀಡಲಾಗುವುದು ಎಂದರು. 

 ಉದ್ಯೋಗಿನಿ ಯೋಜನೆಯಡಿ ಸಾಲ ಮಂಜೂರಾದ ಫಲಾನುಭಗಳಿಗೆ ಸಹಾಯಧನದ ಚೆಕ್ ವಿತರಿಸಲಾಯಿತು. ನಿಗಮದ ಪ್ರಧಾನ ವ್ಯವಸ್ಥಾಪಕ ಮುನಿರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾ ಮಂಡಳಿ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.