ಬೀದರ್: ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ ಸಂವಿಧಾನದ 371(ಜೆ)ನೇ ಕಲಂ ತಿದ್ದುಪಡಿ ಅನುಷ್ಠಾನಗೊಳ್ಳುವವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮೂಲಕ ಉನ್ನತ ಶಿಕ್ಷಣ ಪ್ರವೇಶ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ವಿವಿಧ ಸಂಘಟನೆಗಳುಆಗ್ರಹಿಸಿವೆ.
ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಒಳಗೊಂಡ ನಿಯೋಗ ಸೋಮವಾರ ಜಿಲ್ಲಾಧಿಕಾರಿ ಡಾ. ಪಿ.ಸಿ. ಜಾಫರ್ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿತು.
ಹಿಂದುಳಿದ ಈ ಪ್ರದೇಶದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 371ನೇ ಕಲಂಗೆ ತಿದ್ದುಪಡಿ ಮಾಡಿದೆ. ರಾಜ್ಯ ಸರ್ಕಾರ ನಿಯಮಾವಳಿ ರೂಪಿಸಿ ಅನುಷ್ಠಾನಗೊಳಿಸಬೇಕಿದೆ.
ಆದರೆ, ಪ್ರಸಕ್ತ ಸಾಲಿಗೆ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ನಡೆಸುತ್ತಿದ್ದರಿಂದ ಈ ಭಾಗಕ್ಕೆ ಸಿಗಬೇಕಿದ್ದ ಮೀಸಲು ಸ್ಥಾನಗಳು ಕೈತಪ್ಪಲಿವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ದೂರಿದ್ದಾರೆ.
ಈಗಾಗಲೇ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕಿಯೆಯನ್ನು ತಡೆಹಿಡಿಯಲಾಗಿದೆ. ಹಾಗೆಯೇ ವಿವಿಧ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಯನ್ನೂ ಸ್ಥಗಿತಗೊಳಿಸಬೇಕು.
ಶೀಘ್ರ ನಿಯಮಾವಳಿ ರೂಪಿಸಿ ಈ ಭಾಗದ ವಿದ್ಯಾರ್ಥಿಗಳಿಗೆ ಮೀಸಲಾತಿ ಲಾಭ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಐಎಂಎ ಅಧ್ಯಕ್ಷ ಡಾ. ಅಶೋಕ್ಕುಮಾರ್ ನಾಗೂರೆ, ಬಸವಕಲ್ಯಾಣ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗುಂಡುರೆಡ್ಡಿ, ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಶಿವಯ್ಯ ಸ್ವಾಮಿ, ಪ್ರಭುರಾವ್ ಕಂಬಳಿವಾಲೆ ಕನ್ನಡ ಸೇವಾ ಪ್ರತಿಷ್ಠಾನದ ಅಧ್ಯಕ್ಷ ನಾಗಶೆಟ್ಟಿ ಧರಂಪುರ, ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷ ವಿನಯ್ ಬಿರಾದಾರ್, ಅನ್ಯಾಯ ವಿರುದ್ಧ ಹೋರಾಟ ಸಮಿತಿ ಅಧ್ಯಕ್ಷ ಶಾಮಣ್ಣ ಬಾವಗಿ, ಅಂಬಿಗರ ಚೌಡಯ್ಯ ಯುವ ಸೇನೆ ಜಿಲ್ಲಾ ಅಧ್ಯಕ್ಷ ಸುನಿಲ್ ಬಾವಿಕಟ್ಟಿ, ಪ್ರಮಖರಾದ ಕಾಶಿನಾಥ ಚಕ್ಕಾ ನಿಯೋಗದಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.