ಬೀದರ್: ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಹಾಗೂ ಸಾವು ಪ್ರಕರಣವನ್ನು ಖಂಡಿಸಿ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು.
ಪರಿಷತ್ ರಾಜ್ಯ ಘಟಕದ ಕಾರ್ಯದರ್ಶಿ ರೇವಣಸಿದ್ದ ಜಾಡರ್ ಮಾತನಾಡಿ, ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ’ ಎಂದು ದೂರಿದರು.
‘ವಿಜಯಪುರ ಮತ್ತು ಭಾಲ್ಕಿ ತಾಲ್ಲೂಕಿನ ಗ್ರಾಮದಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ಸುರಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ ಪಿಯುಸಿ ವಿದ್ಯಾರ್ಥಿನಿ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದು ಕಳವಳ ಉಂಟು ಮಾಡಿದೆ’ ಹೇಳಿದರು.
‘ಸ್ಥಳೀಯ ಕೆಲ ರಾಜಕೀಯ ಮುಖಂಡರ ಒತ್ತಡಕ್ಕೆ ಮಣಿದು ಪ್ರಕರಣವನ್ನು ತಿರುಚಿರುವುದು ಖಂಡನೀಯ. ಪ್ರಕರಣದ ಸಿಒಡಿ ತನಿಖೆ ನಡೆಸಬೇಕು. ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ನೊಂದ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಕೊಡಬೇಕು. ಮಹಿಳಾ ಆಯೋಗ ಮೃತ ವಿದ್ಯಾರ್ಥಿನಿ ಕುಟುಂಬದ ನೆರವಿಗೆ ಧಾವಿಸಬೇಕು’ ಎಂದು ಒತ್ತಾಯಿಸಿದರು.
ನಂತರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪರಿಷತ್ ನಗರ ಘಟಕದ ಕಾರ್ಯದರ್ಶಿ ದೀಪಿಕಾ ಫುಲಾರೆ, ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ ಆಶಾರಾಣಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಸಂಗಮೇಶ ಲದ್ದೆ, ನಗರ ಉಪಾಧ್ಯಕ್ಷ ಅರವಿಂದ ಸುಂದಾಳಕರ್, ಆನಂದ ಡೋಬಾಳೆ, ಅಭಿಷೇಕ ಕಲ್ಮುಡ, ಶ್ರಾವಂತಿ, ವೈಷ್ಣವಿ, ಪ್ರಿಯಾಂಕ, ಪಲ್ಲವಿ, ಶಿವನಂದಾ, ಅನಂತರೆಡ್ಡಿ, ಸಾಯಿನಾಥ, ಉಮಾಕಾಂತ, ಸ್ಯಾಮುವೆಲ್, ವಿಲ್ಸನ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.