ADVERTISEMENT

ಬಾಕಿ ವೇತನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2012, 8:10 IST
Last Updated 20 ಏಪ್ರಿಲ್ 2012, 8:10 IST

ಬೀದರ್: ಬಾಕಿ ಇರುವ 25- 30 ತಿಂಗಳ ವೇತನ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ನಗರದಲ್ಲಿ ಗುರುವಾರ ಪ್ರತಿಭಟನಾ ರ‌್ಯಾಲಿ ನಡೆಸಲಾಯಿತು.

ನಗರದ ಪ್ರಮುಖ ಬೀದಿಗಳ ಮೂಲಕ ಜಿಲ್ಲಾ ಪಂಚಾಯಿತಿ ಕಚೇರಿಗೆ ತೆರಳಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.ಶೇ. 70 ರಷ್ಟು ಕಾರ್ಯದರ್ಶಿ ಹುದ್ದೆಗಳಿಗೆ ಜೇಷ್ಠತೆ ಆಧರಿಸಿ ಬಿಲ್ ಕಲೆಕ್ಟರ್‌ಗಳಿಗೆ ಬಡ್ತಿ ನೀಡಬೇಕು. ಶೇ. 30 ರಷ್ಟು ಅಕೌಂಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಜೇಷ್ಠತೆ ಆಧಾರದ ಮೇಲೆ ನೇಮಕಾತಿಗಾಗಿ ಪ್ರಸ್ತಾವನೆ ಸಲ್ಲಿಸಬೇಕು.
 
ಈ ಹಿಂದಿನ ಜೇಷ್ಠತಾ ಪಟ್ಟಿಯ ಪ್ರಕಾರ ನೇಮಕ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಬಡ್ತಿ ಪ್ರಕ್ರಿಯೆ ಚಾಲನೆಯಲ್ಲಿ ಇರುವುದರಿಂದ ತೆರವಾಗಲಿರುವ ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಪಂಪ್ ಆಪರೇಟರ್‌ಗಳನ್ನು ನೇಮಕ ಮಾಡಿಕೊಳ್ಳಬೇಕು. ಪರಿಷ್ಕೃತ ಕನಿಷ್ಠ ವೇತನ ಹಾಗೂ ತುಟ್ಟಿಭತ್ಯೆ ಕೊಡಬೇಕು.

 ಅಕ್ರಮ ಬಿಲ್ ಕಲೆಕ್ಟರ್ ನೇಮಕಾತಿ ತಡೆಗಟ್ಟಬೇಕು. ಭವಿಷ್ಯ ನಿಧಿ ಯೋಜನೆ ಜಾರಿಯಾಗಬೇಕು. ವಿನಾಕಾರಣ ಕೆಲಸದಿಂದ ತೆಗೆದು ಹಾಕಿದವರನ್ನು ಮತ್ತೆ ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಮುಖರಾದ ಗುರುಶಾಂತ ಬಿರಾದಾರ್, ಅಮೃತ್ ಕಮಠಾಣ, ಅಬ್ರಾಹಂ ಹಳ್ಳಿಖೇಡ್, ಮೋತಿಲಾಲ್ ಭಾಲ್ಕಿ, ರಾಜಪ್ಪ ನೌಬಾದ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.