ಕಮಲನಗರ: ಸಮರ್ಪಕವಾಗಿ ಬಿತ್ತನೆ ಬೀಜ ವಿತರಣೆ ಮಾಡದ ಕೃಷಿ ಅಧಿಕಾರಿ ಕ್ರಮವನ್ನು ಖಂಡಿಸಿ ದಾಬಕಾ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ರೈತರು ಬುಧವಾರ ಉದಗೀರ್–ಔರಾದ್ ಅಂತರರಾಜ್ಯ ಹೆದ್ದಾರಿ ತಡೆ ನಡೆಸಿದರು.
‘ಮುಂಗಾರು ಹಂಗಾಮಿನ ರಿಯಾಯಿತಿ ದರದ ಸೋಯಾಬಿನ್ ಹಾಗೂ ಅವರೆ ಬಿತ್ತನೆ ಬೀಜಗಳು ಮಹಾರಾಷ್ಟ್ರ ರಾಜ್ಯದ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಕಾರ್ಯದಲ್ಲಿ ಮಧ್ಯವರ್ತಿಗಳಿಗೆ ಕೃಷಿ ಇಲಾಖೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕಾದ ರೈತ ಸಂಪರ್ಕ ಕೇಂದ್ರ, ರೈತರಿಗೆ ಅನ್ಯಾಯ ಮಾಡುತ್ತಿದೆ. ರೈತ ಸಂಪರ್ಕ ಕೇಂದ್ದರ ವ್ಯಾಪ್ತಿಯ ಗಂಗನಬೀಡ್, ದಾಬಕಾ, ಅಕನಾಪುರ್, ಮುತ್ತಖೇಡ್, ಚೊಂಡಿಮುಖೇಡ್ ಗ್ರಾಮಗಳ ರೈತರಿಗೆ ಕಳೆದ ಐದಾರು ದಿನಗಳಿಂದ ಬೀಜ ವಿತರಣೆಯಾಗಿಲ್ಲ. ಇದರಿಂದ ಕೃಷಿ ಕಾರ್ಯಕ್ಕೆ ಹಿನ್ನಡೆಯಾಗುತ್ತಿದೆ. ಕೂಡಲೇ ರೈತರಿಗೆ ರಿಯಾಯಿತಿ ದರದಲ್ಲಿ ಬೀಜಗಳನ್ನು ಸಮರ್ಪಕವಾಗಿ ವಿತರಿಸಲು ಕ್ರಮ ಕೈಗೊಳ್ಳಬೇಕು’ ಎಂದು ರೈತರು ಒತ್ತಾಯಿಸಿದರು.
ರಸ್ತೆ ತಡೆ ನಡೆಸಿದ್ದರಿಂದ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.
ಭೇಟಿ: ಸ್ಥಳಕ್ಕೆ ತಹಶೀಲ್ದಾರ್ ಎಂ.ಚಂದ್ರಶೇಖರ್, ಸಹಾಯಕ ಕೃಷಿ ಅಧಿಕಾರಿ ಡಾ.ಸಂಜೀವಕುಮಾರ ಮಾನಕರಿ ಭೇಟಿ ನೀಡಿ, ರೈತರ ಸಮಸ್ಯೆಗಳನ್ನು ಆಲಿಸಿದರು.
‘ರೈತರಿಗೆ ಸಮರ್ಪಕವಾಗಿ ಬೀಜ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಮಹಾರಾಷ್ಟ್ರದ ಗಡಿಯಲ್ಲಿ ಚೆಕ್ಪೋಸ್ಟ್ ಸ್ಥಾಪಿಸಿ, ಕಾಳಸಂತೆಯಲ್ಲಿ ಬೀಜ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಹಶೀಲ್ದಾರ್ ಚಂದ್ರಶೇಖರ್ ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.