ADVERTISEMENT

ಬೀದರ್: ಮಕ್ಕಳ ಸಂಸತ್

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2012, 4:30 IST
Last Updated 22 ಅಕ್ಟೋಬರ್ 2012, 4:30 IST

ಬೀದರ್: ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅವರಿಂದಲೇ ಅರಿಯುವ ನಿಟ್ಟಿನಲ್ಲಿ ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರಿನ ಮಕ್ಕಳ ಹಕ್ಕುಗಳ ನಿಗಾ ಕೇಂದ್ರದ ಸಹಯೋಗದೊಂದಿಗೆ ನಗರದ ಸರಸ್ವತಿ ಶಾಲೆಯಲ್ಲಿ ಭಾನುವಾರ `ಮಕ್ಕಳ ಸಂಸತ್~ ಕಾರ್ಯಕ್ರಮ ಏರ್ಪಡಿಸಿತ್ತು.

ಜಿಲ್ಲೆಯ ವಿವಿಧ ಪ್ರೌಢಶಾಲೆಗಳ 8, 9 ಮತ್ತು 10ನೇ ತರಗತಿಯ 57 ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಈ ಪೈಕಿ ಇಬ್ಬರು ಮಕ್ಕಳನ್ನು ರಾಜ್ಯ ಸಂಸತ್‌ಗೆ ಆಯ್ಕೆ ಮಾಡಿದ್ದು, ಇವರು ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸುವ ಅವಕಾಶ ಪಡೆಯಲಿದ್ದಾರೆ.

ಮಕ್ಕಳ ಬಗೆಗೆ ಕಾಳಜಿ ವಹಿಸದಿರುವುದೇ ಈ ಭಾಗ ಶೈಕ್ಷಣಿಕವಾಗಿ ಹಿಂದುಳಿಯಲು ಕಾರಣ ಎಂದು ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ ಅಭಿಪ್ರಾಯಪಟ್ಟರು.

ಮಕ್ಕಳ ಸಂಸತ್ ಮತ್ತಿತರ ಕಾರ್ಯ ಕ್ರಮಗಳ ಮೂಲಕ ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಸರ್ಕಾರದಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡ ನಂತರವೂ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಆಗಾಗ್ಗೆ ಬೆಳಕಿಗೆ ಬರುತ್ತಲೇ ಇವೆ. ಸಮಾಜ ಜಾಗೃತವಾದಾಗ ಮಾತ್ರ ಇಂಥವನ್ನು ತಡೆಯಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪಿ.ಎಸ್. ಇಟಗಂಪಳ್ಳಿ ತಿಳಿಸಿದರು.

ಬೆಂಗಳೂರಿನ ಮಕ್ಕಳ ಹಕ್ಕುಗಳ ನಿಗಾ ಕೇಂದ್ರದ ಯೋಜನಾ ಸಹಾಯಕ ಸತ್ಯನಾರಾಯಣ್, ಸಹಯೋಗ ಸ್ವಯಂ ಸೇವಾ ಸಂಸ್ಥೆಯ ನಿರ್ದೇಶಕ ಎಂ.ಡಿ. ಶಫಿ ಯೊದ್ದೀನ್, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ರಮೇಶ್ ಅಂಬುಲಗಿಕರ್ ಉಪಸ್ಥಿತರಿದ್ದರು. ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಗೌರವಾಧ್ಯಕ್ಷ ರಾಮಕೃಷ್ಣ ಸಾಳೆ ಅಧ್ಯಕ್ಷತೆ ವಹಿಸಿದ್ದರು. ರಮೇಶ್ ಬಿರಾದಾರ್ ಸ್ವಾಗತಿಸಿದರು. ನಿರಹಂಕಾರ್ ಬಂಡಿ ನಿರೂಪಿಸಿದರು. ಶಿವಾನಂದ ಅಟ್ಟೂರು ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.