ADVERTISEMENT

ಭ್ರೂಣ ಹತ್ಯೆ ವಿರುದ್ಧ ಜನಜಾಗೃತಿ ಅಗತ್ಯ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2012, 5:40 IST
Last Updated 11 ಫೆಬ್ರುವರಿ 2012, 5:40 IST

ಕಮಲನಗರ: ಕೇವಲ ಭ್ರೂಣ ಹತ್ಯೆ ಮತ್ತು ಭ್ರೂಣ ಲಿಂಗ ಪತ್ತೆ  ನಿಷೇಧ ಕಾಯಿದೆಯಿಂದ ಹೆಣ್ಣು ಸಂತತಿ ರಕ್ಷಿಸಲಾಗುವುದಿಲ್ಲ. ಈ ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಭಾಷ ಮುದಾಳೆ ಹೇಳಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ `ಹೆರಿಗೆಗೆ ಮುನ್ನ ಭ್ರೂಣಲಿಂಗ ಪತ್ತೆ ಶಾಸನ~ ಕುರಿತು ಆರೋಗ್ಯ ಸೇವಾ ಕಾರ್ಯಕರ್ತರಿಗಾಗಿ ಏರ್ಪಡಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ನ್ಯಾಯವಾದಿ ಸಂತೋಷ ಉಪ್ಪೆ ಮಾತನಾಡಿ, ಸ್ಕ್ಯಾನಿಂಗ್ ಯಂತ್ರಗಳು ಬಂದಾಗಿನಿಂದ ಹೆಣ್ಣು ಭ್ರೂಣ ಹತ್ಯೆಗಳ ಪ್ರಮಾಣ ಹೆಚ್ಚಾಗಿದೆ. ಹೆರಿಗೆಗೆ ಮುನ್ನವೇ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿರುವುದರಿಂದ ಸ್ತ್ರೀ ಹಾಗೂ ಪುರುಷರ ಅನುಪಾತದಲ್ಲಿ ವ್ಯತ್ಯಾಸ ಉಂಟಾಗುತ್ತಿದೆ. ಇದರಿಂದ ಸಾಮಾಜಿಕ ಸ್ವಾಸ್ಥ್ಯಕ್ಕೆ ಪೆಟ್ಟು ಬೀಳಲಿದೆ ಎಂದರು.

ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಾಮನರಾವ್ ವಾಘಮಾರೆ ಮಾತನಾಡಿ, ಹೆಣ್ಣು ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧವಾಗಿದೆ ಎಂದು ವಿವರಿಸಿದರು. ವೈದ್ಯಾಧಿಕಾರಿ ಡಾ. ಭಗವಾನ ಮಳದರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಡಾ.ಮಮತಾ ಕಲ್ಯಾಣಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕುಷ್ಠರೋಗ ಅಧಿಕಾರಿ ಸತ್ಯಪ್ಪಾ, ಆರೋಗ್ಯ ಮೇಲ್ವಿಚಾರಕಿ ಶಾಂತಾ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು. ಬಿ.ಎಚ್.ಸುರೇಶ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.