ADVERTISEMENT

`ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ'

​ಪ್ರಜಾವಾಣಿ ವಾರ್ತೆ
Published 1 ಜೂನ್ 2013, 10:02 IST
Last Updated 1 ಜೂನ್ 2013, 10:02 IST

ಕಮಲನಗರ: ಸರ್ಕಾರಿ ಶಾಲೆಗಳಲ್ಲಿ ಮಾತ್ರ ದೇಶದ ನಿಜವಾದ ನಾಗರೀಕತೆ ಅಡಗಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಲು ಮುಂದಾಗಬೇಕು ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀರಂಗ್ ಪರಿಹಾರ್ ಹೇಳಿದರು.

ಇಲ್ಲಿಗೆ ಸಮೀಪದ ಖತಗಾಂವ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ಪ್ರಾರಂಭೋತ್ಸವದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಿ ಮಾತನಾಡಿದರು.

ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಸದುಪಯೋಗ ಪಡೆದುಕೊಳ್ಳುವುದರ ಜತೆಗೆ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಸಮುದಾಯದವರು ಸಹಕಾರ ನೀಡಬೇಕು ಎಂದರು.

ಮುಖಂಡ ಶಿವಶರಣಪ್ಪ ಹಣಮಶೆಟ್ಟೆ ಮಾತನಾಡಿ, ಇಂದು ದೇಶದಲ್ಲಿ ಉನ್ನತ ಸ್ಥಾನ ಅಲಂಕರಿಸಿದ ಅನೇಕ ಮಹನೀಯರು ಸರ್ಕಾರಿ ಶಾಲೆಗಳಲ್ಲಿ ಅಭ್ಯಾಸ ಮಾಡಿ ಸಾಧನೆ ಮಾಡಿದವರೇ ಆಗಿದ್ದಾರೆ. ಹೀಗಾಗಿ ಸರ್ಕಾರಿ ಶಾಲೆ ಎಂಬ ಕೀಳರಿಮೆ ಪಾಲಕರಲ್ಲಿ ಬರಬಾರದು ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಇಂದ್ರಜಿತ್ ಗವಳಿ, ನಿವೃತ್ತ ಶಿಕ್ಷಕ ಶಿವರಾಜ ಬಿರಾದಾರ್, ಮುಖಂಡ ಧನರಾಜ ಧರಣೆ, ಪ್ರಮೋದ್ ಧರಣೆ, ರಮೇಶ ಪಾಟೀಲ, ಇಂದಿರಾಬಾಯಿ ಕಾಂಬಳೆ, ಸಂಗೀತಾ ಬಿರಾದಾರ್, ರೇಖಾ ಬಿರಾದಾರ್, ಸುರೇಖಾ ಸಮದಡೆ ಇದ್ದರು. ಸುಭಾಷ ಬಿರಾದಾರ್ ಸ್ವಾಗತಿಸಿದರು. ಮಲ್ಲಮ್ಮ ಕಸ್ತೂರೆ ವಂದಿಸಿದರು. ಸೂರ್ಯಕಾಂತ ಮಹಾಜನ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.