ಹುಮನಾಬಾದ್: ಸ್ಪಷ್ಟ ಬಹುಮತ ಇರದಿದ್ದರೂ ಸರ್ಕಾರ ರಚಿಸಲು ಬಿಜೆಪಿಗೆ ರಾಜ್ಯಪಾಲರು ಅವಕಾಶ ನೀಡಿರುವ ಕ್ರಮ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿ ಸಿಪಿಎಂ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆ ಮುಖಂಡರು ಮತ್ತು ಕಾರ್ಯಕರ್ತರು ಶುಕ್ರವಾರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ನವರು ಸರ್ಕಾರ ರಚಿಸಲು ಸಂಖ್ಯಾಬಲ ಹೊಂದಿದ್ದು, ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಆದರೂ ಅವರ ಕೋರಿಕೆಗೆ ಮನ್ನಣೆ ಮಾಡದ ರಾಜ್ಯಪಾಲರು ಬಿಜೆಪಿಗೆ ಅವಕಾಶ ನೀಡಿರುವುದು ಸರಿಯಲ್ಲ ಎಂದು ಸಿಪಿಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಪ್ರಭು ಸಂತೋಷಕರ್ ತಿಳಿಸಿದರು.
ಕೋಮು ಭಾವನೆ ಕೆರಳಿಸುವ ಮತ್ತು ಹಿಂಸಾಚಾರ ಪ್ರಚೋದಿಸುವ ಪಕ್ಷಕ್ಕೆ ಅವಕಾಶ ನೀಡಿರುವುದು ಯಾವುದೇ ಕಾರಣಕ್ಕೂ ಸಹಿಸಲ್ಲ. ಒಟ್ಟಿನಲ್ಲಿ ಸಂವಿಧಾನಕ್ಕೆ ಅಪಚಾರ ಮಾಡಲಾಗಿದೆ ಎಂದು ಅವರು ಟೀಕಿಸಿದರು.
ಮುಖಂಡರಾದ ಬಸವರಾಜ ಮಾಳಗೆ, ಇಸ್ಸಾಮುದ್ದಿನ್, ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಕಾರ್ಯದರ್ಶಿ ರೇಷ್ಮಾ ಹಂಸರಾಜ್, ಸೋಮಶೇಖರ ಡಾಂಗೆ, ಸೈಯದ್ ಗೌಸೋದ್ದಿನ್, ಶೇಖ ವಾಜೀದ್ ಪಾಷಾ, ಮಹ್ಮದ್ ಗೌಸ್ ಖುರೇಷಿ, ಸೈಯದ್ ವಸೀಮ್ ಪ್ರತಿಭಟನೆಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.