ADVERTISEMENT

ಲಾಠಿ ಪ್ರಹಾರ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2011, 8:15 IST
Last Updated 13 ಏಪ್ರಿಲ್ 2011, 8:15 IST
ಲಾಠಿ ಪ್ರಹಾರ ಖಂಡಿಸಿ ಪ್ರತಿಭಟನೆ
ಲಾಠಿ ಪ್ರಹಾರ ಖಂಡಿಸಿ ಪ್ರತಿಭಟನೆ   

ಬೀದರ್: ರಸ್ತೆಗಾಗಿ ಪ್ರತಿಭಟನೆ ನಡೆಸುತ್ತಿದ್ದ ಶಹಾಪುರ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘವು ನಗರದಲ್ಲಿ ಮಂಗಳವಾರ ಪ್ರತಿಭಟನಾ ರ್ಯಾಲಿ ನಡೆಸಿತು. ನಗರದ ಬೊಮ್ಮಗೊಂಡೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನಾಕಾರರ ಮನ ಒಲಿಸುವ ಬದಲು ತಹಸೀಲ್ದಾರ್ ಸಮ್ಮುಖದಲ್ಲಿಯೇ ಲಾಠಿ ಪ್ರಹಾರ ನಡೆಸಿರುವುದು ಖಂಡನೀಯ ಎಂದು ಜಿಲ್ಲಾಧಿಕಾರಿಗಳೀಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಲು ಹೋಗಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಮೃತರಾವ ಚಿಮಕೋಡ್ ಅವರನ್ನು ಬಂಧಿಸಿರುವ ಕ್ರಮ ಸರಿಯಾದುದಲ್ಲ ಎಂದು ಹೇಳಿದ್ದಾರೆ.

ರಸ್ತೆಗಾಗಿ ಪ್ರತಿಭಟನೆ ನಡೆಸುತ್ತಿದ್ದವರಿಗೆ ಲಾಠ ಏಟು ನೀಡಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ. ಶಹಾಪುರ ಗ್ರಾಮದವರೆಗೆ ರಸ್ತೆ ನಿರ್ಮಾಣಕ್ಕಾಗಿ ಗ್ರಾಮಸ್ಥರು ಅನೇಕ ಬಾರಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದಾರೆ. ಅದಾಗಿಯು ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಹೀಗಾಗಿ ನಾಗರಿಕರು ರಸ್ತೆತಡೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ ಹಿನ್ನೆಲೆಯಲ್ಲಿ ತಹಸೀಲ್ದಾರರು ಹಾಗೂ ಮಾರ್ಕೇಟ್ ಠಾಣೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಅವರನ್ನು ವಜಾಗೊಳಿಸಬೇಕು.ಹೋರಾಟಗಾರರ ಮೇಲೆ ಹೂಡಲಾಗಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದುಕೊಳ್ಳಬೇಕು. ಹಾಗೂ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಗೊಂಡ ವಿದ್ಯಾರ್ಥಿ ಸಂಘದ ಜಿಲ್ಲಾ ಅಧ್ಯಕ್ಷ ಸಂತೋಷಕುಮಾರ ಜೊಳದಾಪಕೆ, ಪ್ರಮುಖರಾದ ರಾಜಪ್ಪ ಎಸ್ಕೆ, ಮಲ್ಲಿಕಾರ್ಜುನ ತಾಳಮಡಗಿ, ದತ್ತು ಕಾಡವಾದ, ಸಂಜು ಸಿಂಧೋಲಕರ್, ಸಂಜು ಜಾಂಪಡೆ, ಗೋವಿಂದ ಮಾಳೆಗಾಂವ್, ದತ್ತು ಹಾಲಹಳ್ಳಿ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.