ADVERTISEMENT

ಶೀಘ್ರವೇ ಕಾಮಗಾರಿ ಪೂರ್ಣ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2011, 12:25 IST
Last Updated 9 ಫೆಬ್ರುವರಿ 2011, 12:25 IST

ಹುಮನಾಬಾದ್: ಹುಮನಾಬಾದ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುವರ್ಣ ಗ್ರಾಮೋದಯ ಯೋಜನೆ ಅಡಿ ಕೈಗೊಳ್ಳಲಾಗುತ್ತಿರುವ 3ನೇ ಹಂತದ ಎಲ್ಲ ಕಾಮಗಾರಿ ಮೇ ಅಂತ್ಯದೊಳಗೆ ಪೂರ್ಣಗೊಳಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಶಾಸಕ ರಾಜಶೇಖರ ಬಿ. ಪಾಟೀಲ ತಿಳಿಸಿದರು. ತಾಲ್ಲೂಕಿನ ಜಲಸಂಗವಿಯಲ್ಲಿ ಮಂಗಳವಾರ ಸುವರ್ಣ ಗ್ರಾಮೋದಯ ಯೋಜನೆಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ರೂ. 66ಲಕ್ಷದ ಕಾಮಗಾರಿ ಅಡಿಗಲ್ಲು ಕಾರ್ಯಕ್ರಮ ಅನಾವರಣಗೊಳಿಸಿ ಅವರು ಮಾತನಾಡಿದರು.

ಈ ಹಿಂದೆ ಹುಲಸೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತಿದ್ದ ಬಹುತೇಕ ಗ್ರಾಮಗಳು ಈ ಬಾರಿ ಹುಮನಾಬಾದ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರ್ಪಡೆಗೊಂಡಿವೆ. ಹಿಂದೆ ಅಭಿವೃದ್ಧಿಯಿಂದ ವಂಚಿತಗೊಂಡ ಗ್ರಾಮಗಳ ಅಭಿವೃದ್ಧಿಗೆ  ಆದ್ಯತೆ ನೀಡುವ ಉದ್ದೇಶದಿಂದ ಹೊಸ ಕ್ಷೇತ್ರದಲ್ಲಿನ ಅನೇಕ ಗ್ರಾಮಗಳನ್ನು ಸುವರ್ಣ ಗ್ರಾಮೋದಯ ಯೋಜನೆಗೆ ಆಯ್ಕೆಮಾಡಿಕೊಳ್ಳಲಾಗಿದೆ ಎಂದು ಶಾಸಕ ರಾಜಶೇಖರ ಪಾಟೀಲ ತಿಳಿಸಿದರು.

ಭಾರತ ನಿರ್ಮಾಣ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಕುಡಿಯುವ ನೀರಿನ ಕಾಮಗಾರಿ ಅಪೂರ್ಣ ಸ್ಥಿತಿಯಲ್ಲಿ ಇರುವುದು ಗಮನಕ್ಕೆ ಬಂದಿದ್ದು, ಶೀಘ್ರವೇ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಪರಿಶಿಷ್ಟ ಜಾತಿ ಸಮೂದಾಯ ಭವನ, ವಿದ್ಯುತ್ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಾಧ್ಯವಾದಷ್ಟು ಶೀಘ್ರ ಜಿಲ್ಲೆಯ ಎಲ್ಲ ಶಾಸಕರು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರನ್ನು ಪಕ್ಷಾತೀತವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳಿ ನಿಯೋಗ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದಾಗಿ ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷ ಕುಶಾಲರಾವ ಪಾಟೀಲ ಗಾದಗಿ ತಿಳಿಸಿದರು. ತಾಲ್ಲೂಕು ಪಂಚಾಯಿತಿ ಸದಸ್ಯ ಪಾಂಡುರಂಗ ಖಂಡಗೊಂಡ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ತಾನಾಜಿ ಧನಸಿಂಗ್ ರಾಠೋಡ, ಸದಸ್ಯೆ ಚಂದ್ರಮ್ಮ ಎಸ್.ಗಂಗಶೆಟ್ಟಿ, ಗ್ರಾ.ಪಂ ಉಪಾಧ್ಯಕ್ಷೆ ಗೋರಬೀ ಮಹ್ಮದ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾಜಿ ಡೋಣಿ, ಜಿ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎಸ್.ಪಾಟೀಲ ಹಾಗೂ ಗ್ರಾ.ಪಂ ಎಲ್ಲ ಸದಸ್ಯರು ಇದ್ದರು. ಗ್ರಾ.ಪಂ ಅಧ್ಯಕ್ಷ ವಿನೋದ ತುಕಾರಾಮ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.

ಸಂಗೀತ ಶಿಕ್ಷಕ ಸಂಗಯ್ಯಸ್ವಾಮಿ ಮಾರ್ದರ್ಶನದಲ್ಲಿ ಜಲಸಂಗವಿ ಪ್ರೌಢ ಶಾಲೆ ವಿದ್ಯಾರ್ಥಿನಿಯರು ಪ್ರಾತರ್ಥಿಸಿದರು. ಭೂಸೇನಾ ನಿಗಮ ಸಹಾಯಕ ನಿರ್ದೇಶಕ ಬಿ.ಎಸ್.ಪಾಟೀಲ ಸ್ವಾಗತಿಸಿದರು. ಮಾಣಿಕಪ್ಪ ಬಕ್ಕನ್ ನಿರೂಪಿಸಿದರು. ರಘುನಾಥ ಘಂಟೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.