ಬೀದರ್: ಮಹಿಳೆಯರ ಮೇಲಿನ ಅತ್ಯಾಚಾರ, ಶೋಷಣೆ ವಿರುದ್ಧ ಹೋರಾಟ ನಡೆಸುವ ಗುಲಾಬಿ ಗ್ಯಾಂಗ್ನಂಥ ಮಹಿಳಾ ಸಂಘಟನೆಗಳು ಜಿಲ್ಲೆಯಲ್ಲಿಯೂ ರಚನೆ ಆಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಅಭಿಪ್ರಾಯಪಟ್ಟರು.
ವಿಶ್ವ ಮಹಿಳಾ ದಿನದ ಅಂಗವಾಗಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನಗರದ ಶಿವಾ ಇಂಟರ್ನ್ಯಾಷನಲ್ನಲ್ಲಿ ಶನಿವಾರ ಆಯೋಜಿಸಿದ್ದ ಮಹಿಳಾ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
‘ಗುಲಾಬಿ ಗ್ಯಾಂಗ್’ ಮಹಿಳಾ ಸಂಘಟನೆ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಟ ನಡೆಸುತ್ತಿದೆ. ಮಹಿಳೆಯರಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ಪರಿಣಾಮಕಾರಿ ಕಾನೂನನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಮಹಿಳೆಯರು ಸಾಧಿಸುವ ಛಲ ಬೆಳೆಸಿಕೊಳ್ಳಬೇಕು ಎಂದು ಮುಖ್ಯಶಿಕ್ಷಕಿ ಪ್ರತಿಭಾ ಚಾಮಾ ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಗಂದಗೆ ಮಾತನಾಡಿದರು. ಪಕ್ಷದ ವಿಭಾಗೀಯ ಸಹ ಹೆಚ್ಚುವರಿ ಗುರುನಾಥ ಜ್ಯಾಂತಿಕರ್, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಜಯದೇವಿ ಯದಲಾಪುರೆ, ಉಪಾಧ್ಯಕ್ಷೆ ವಿಜಯಲಕ್ಷ್ಮಿ ಹೂಗಾರ, ಪ್ರಧಾನ ಕಾರ್ಯದರ್ಶಿ ಸುಚಿತ್ರಾ ಹಂಗರಗೆ, ರಾಜ್ಯ ಪರಿಷತ್ ಸದಸ್ಯೆ ಚಂದ್ರಕಲಾ ವಿಶ್ವಕರ್ಮ, ಜಗದೇವಿ ಜಯಪ್ರಕಾಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.