ಬೀದರ್: ಸ್ಥಳೀಯರಿಗೆ ಹೆಚ್ಚು ಉದ್ಯೋಗಾವಕಾಶ ಕಲ್ಪಿಸುವ ದಿಸೆಯಲ್ಲಿ ಜಿಲ್ಲೆಯ ಕೈಗಾರಿಕೆ ವಲಯದಲ್ಲಿ ₹ 1 ಲಕ್ಷ ಕೋಟಿ ಬಂಡವಾಳ ಆಕರ್ಷಣೆ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ ಮುನೋಳಿ ಹೇಳಿದರು.
ನಗರದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಹಾಗೂ ಹೊಸ ಕೈಗಾರಿಕೆ ನೀತಿ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸದ್ಯ 13 ಬೃಹತ್, 8 ಮಧ್ಯಮ ಹಾಗೂ 1,982 ಸಣ್ಣ ಕೈಗಾರಿಕೆಗಳು ಇವೆ. ಇವುಗಳಲ್ಲಿ ಒಟ್ಟು ರೂ. 18 ಸಾವಿರ ಕೋಟಿ ಹೂಡಿಕೆ ಮಾಡಲಾಗಿದೆ. 24,400 ಮಂದಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಉದ್ಯಮ ಸ್ಥಾಪನೆಗೆ ಉತ್ತಮ ಅವಕಾಶಗಳು ಇವೆ. ಆಸಕ್ತರು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಕೈಗಾರಿಕೆ ಸ್ಥಾಪನೆಗೆ ಮುಂದೆ ಬರಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ 9 ಕೈಗಾರಿಕಾ ವಸಾಹತುಗಳಿವೆ. ಬೀದರ್ನ ಕೊಳಾರ, ಆಟೊನಗರ ಹಾಗೂ ಹುಮನಾಬಾದ್ನಲ್ಲಿ 1,800 ಎಕರೆ ಭೂಮಿಯನ್ನು ಅಭಿವೃದ್ಧಿಪಡಿಸಲಾಗಿದೆ. ಔರಾದ್ನಲ್ಲಿ 100 ಎಕರೆ ಹಾಗೂ ಹುಮನಾಬಾದ್ನಲ್ಲಿ 300 ಎಕರೆ ಕೈಗಾರಿಕಾ ಪ್ರದೇಶಕ್ಕಾಗಿ ಪ್ರಸ್ತಾವ ಪ್ರಕ್ರಿಯೆಯಲ್ಲಿದೆ ಎಂದು ಹೇಳಿದರು.
ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶಿವರಾಜ ಹಲಶೆಟ್ಟಿ, ಜಿಲ್ಲಾ ಎಸ್ಸಿ, ಎಸ್ಟಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಪಿ. ವಿಜಯಕುಮಾರ ಮಾತನಾಡಿದರು. ಕೆಸಿಎಫ್ಸಿಯ ಪ್ರಬಂಧಕ ಬಸವರಾಜ, ಪ್ರಕಾಶ ದೇವಿದಾಸ, ರಾಜಕುಮಾರ ಪಾಟೀಲ ಉಪಸ್ಥಿತರಿದ್ದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ನಾಗಪ್ಪ ರಂಗಪಾಲೆ ಸ್ವಾಗತಿಸಿದರು. ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ನಿರೂಪಿಸಿದರು. ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಕೈಗಾರಿಕೆ ಉಪ ನಿರ್ದೇಶಕ ರಮೇಶ ಮಠಪತಿ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.