ADVERTISEMENT

ಬೀದರ್: ಸಮುದಾಯ ಭವನಕ್ಕೆ ₹ 10 ಲಕ್ಷ ಅನುದಾನ

ಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಶಾಸಕ ರಹೀಂ ಖಾನ್‌ ಭರವಸೆ

​ಪ್ರಜಾವಾಣಿ ವಾರ್ತೆ
Published 10 ಮೇ 2022, 13:41 IST
Last Updated 10 ಮೇ 2022, 13:41 IST
ಬೀದರ್‌ನ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಗೋವಿಂದ ರಡ್ಡಿ ಉದ್ಘಾಟಿಸಿದರು. ಶಾಸಕ ರಹೀಂ ಖಾನ್‌, ಅರವಿಂದಕುಮಾರ ಅರಳಿ, ಶೈಲೇಂದ್ರ ಬೆಲ್ದಾಳೆ, ಗುರಮ್ಮ ಸಿದ್ದಾರಡ್ಡಿ, ಬೆಳ್ದಾಳ್‌ ಸಿದ್ಧರಾಮ ಶರಣರು, ರೆಡ್ಡಿ ಗುರೂಜಿ, ಡಿ.ಕಿಶೋರಬಾಬು ಇದ್ದಾರೆ
ಬೀದರ್‌ನ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಗೋವಿಂದ ರಡ್ಡಿ ಉದ್ಘಾಟಿಸಿದರು. ಶಾಸಕ ರಹೀಂ ಖಾನ್‌, ಅರವಿಂದಕುಮಾರ ಅರಳಿ, ಶೈಲೇಂದ್ರ ಬೆಲ್ದಾಳೆ, ಗುರಮ್ಮ ಸಿದ್ದಾರಡ್ಡಿ, ಬೆಳ್ದಾಳ್‌ ಸಿದ್ಧರಾಮ ಶರಣರು, ರೆಡ್ಡಿ ಗುರೂಜಿ, ಡಿ.ಕಿಶೋರಬಾಬು ಇದ್ದಾರೆ   

ಬೀದರ್: ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನಕ್ಕೆ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಿಂದ ₹ 10 ಲಕ್ಷ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಶಾಸಕ ರಹೀಂ ಖಾನ್‌ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಗರದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮದ

ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ADVERTISEMENT

ಯಾವ ದೇವರೂ ಸಹ ತಾಯಿಯ ಗರ್ಭದಲ್ಲಿ ಬೆಳೆಯುವ ಮಗುವಿಗೆ ಧರ್ಮದ ಗುರುತು ಮಾಡುವುದಿಲ್ಲ. ಆದರೆ ಜನ್ಮ ತಾಳಿದ ಮೇಲೆ ನಾಮಕರಣ ಮಾಡಲಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ಶಾಂತಿ ಮತ್ತು ಭಾವಕೈತೆಯಿಂದ ಬಾಳಬೇಕಾಗಿದೆ. ಸಂತರು ಶರಣರು ಸಹ ಇದನ್ನೇ ಹೇಳಿದ್ದಾರೆ ಎಂದರು.

ಬೆಳ್ದಾಳ್ ಸಿದ್ಧರಾಮ ಶರಣರು ಮಾತನಾಡಿ, ಸರ್ಕಾರದ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಮಾಡುತ್ತಿರುವುದು ಸಂತಸ ತಂದಿದೆ ಎಂದರು.

ಸಂಸಾರಿಯಾಗಿದ್ದ ಮಲ್ಲಮ್ಮ ಜೀವನದಲ್ಲಿ ಕಷ್ಟ-ನಷ್ಟಗಳನ್ನು ಸಹಿಸಿಕೊಂಡು ಅಧ್ಯಾತ್ಮದಲ್ಲಿ ಸಾಧನೆ ಮಾಡಿದರು. ಸಮರ್ಪಣಾ ಭಾವದಿಂದ ಖ್ಯಾತಿಯನ್ನೂ ಪಡೆದರು.ಇಂದು ಅತ್ತೆ-ಮಾವ ಬೇಡ ಎನ್ನುವ ಸೊಸೆಯಂದಿರ ಸಂಖ್ಯೆಯೇ ಹೆಚ್ಚಾಗಿದೆ ಎಂದು ಹೇಳಿದರು.

ಲೇಖಕ ಮಹಿಪಾಲರೆಡ್ಡಿ ಸೇಡಂ ವಿಶೇಷ ಉಪನ್ಯಾಸ ನೀಡಿದರು.

ಮೆರವಣಿಗೆ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರದ ಮೆರವಣಿಗೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭವಾದ ಮೆರವಣಿಗೆ ಛತ್ರಪತಿ ಶಿವಾಜಿ ವೃತ್ತ, ಭಗತ್ ಸಿಂಗ್ ವೃತ್ತ, ಬಸವೇಶ್ವರ ವೃತ್ತದ ಮಾರ್ಗವಾಗಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಮುದಾಯ ಭವನದ ವರೆಗೆ ನಡೆಯಿತು.

ಇದೇ ಸಂದರ್ಭದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪುರಸ್ಕೃತ ಸಿದ್ದಾರಾಮ ಶರಣರು ಹಾಗೂ ಗುರಮ್ಮ ಸಿದ್ದಾರೆಡ್ಡಿ ಅವರನ್ನು ಸನ್ಮಾನಿಸಲಾಯಿತು.

ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ರಾಜ್ಯ ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಜಿ.ಮುಳೆ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಚನ್ನಬಸವ ಸ್ವಾಮೀಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು ಹಾಗೂ ರೆಡ್ಡಿ ಸಮಾಜದ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.