ಬೀದರ್: ಇಲ್ಲಿಯ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ವಿಶ್ವವಿದ್ಯಾಲಯದ ಹನ್ನೊಂದನೆಯ ಘಟಿಕೋತ್ಸವದಲ್ಲಿ 113 ಸಾಧಕ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು.
ಒಟ್ಟು 312 ಪದವೀಧರರು ಪದವಿ ಸ್ವೀಕರಿಸಿದರು.
ಬಿ.ವಿ.ಎಸ್ಸಿ ಎ.ಎಚ್ನಲ್ಲಿ ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯದ ವಿಶ್ವಾಸ್ ಕೆ.ಎಂ. ಹಾಗೂ ಹಾಸನದ ಶ್ರುತಿ ವಲ್ಸನ್ ತಲಾ 10 ಚಿನ್ನದ ಪದಕಗಳನ್ನು ಪಡೆದುಕೊಂಡರು. ಬೀದರ್ನ ಪಶು ವೈದ್ಯಕೀಯ ಮಹಾವಿದ್ಯಾಲಯದ ವಿಜಯಪುರ ಮೂಲದ ಸಚಿನ್ ಕೊಂಡಗುರಲಿ 6, ಬೀದರ್ನ ಶಿವಾನಿ ಮಾಮನೆ 5, ಹಾಸನದ ಪಶು ವೈದ್ಯಕೀಯ ಮಹಾವಿದ್ಯಾಲಯದ ವರುಣ ಶಾಸ್ತ್ರಿ ಹಾಗೂ ಶ್ರಾವ್ಯಾ ಬಿ.ಎಲ್. ತಲಾ 4 ಚಿನ್ನದ ಪದಕಗಳನ್ನು ಪಡೆದುಕೊಂಡರು.
ಕೇಂದ್ರ ಕೃಷಿ ಮತ್ತು ರೈತ ಕ್ಷೇಮಾಭಿವೃದ್ಧಿ ಸಚಿವಾಲಯದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶೋಕ ದಳವಾಯಿ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.
ವಿಶ್ವವಿದ್ಯಾಲಯದ ಸಹ ಕುಲಾಧಿಪತಿಯಾದ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಅಧ್ಯಕ್ಷತೆ ವಹಿಸಿದ್ದರು. ಕುಲಪತಿ ಪ್ರೊ.ಎಚ್.ಡಿ.ನಾರಾಯಣಸ್ವಾಮಿ, ಕುಲಸಚಿವ ಕೆ.ಸಿ.ವೀರಣ್ಣ, ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ಸದಸ್ಯರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.