ಬೀದರ್: ಬೀದರ್ ನಗರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ₹ 2 ಕೋಟಿ ಮಂಜೂರು ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಲ್ಲಿ ಕನ್ನಡ ಭವನ ನಿರ್ಮಿಸಬೇಕು ಎನ್ನುವುದು ಬಹುದಿನಗಳ ಬೇಡಿಕೆಯಾಗಿತ್ತು. ನಾನು ಸಚಿವನಾದ ನಂತರ ವಿಷಯವನ್ನು ಪ್ರಥಮ ಆದ್ಯತೆಯಾಗಿ ಸ್ವೀಕರಿಸಿ, ಸಂಬಂಧಿಸಿದ ಸಚಿವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ. ಅಚ್ಚುಕಟ್ಟಾದ ಭವನ ನಿರ್ಮಾಣ ಕುರಿತು ಪದೇ ಪದೇ ಒತ್ತಡ ಹಾಕುತ್ತಿದ್ದೆ. ಹೀಗಾಗಿ ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಕನ್ನಡ ಭವನ ವಿಷಯವು ಈಗ ಇತ್ಯರ್ಥಗೊಂಡಿದೆ ಎಂದು ಹೇಳಿದ್ದಾರೆ.
ಜಿಲ್ಲಾಡಳಿತವು ಕನ್ನಡ ಭವನಕ್ಕಾಗಿ ಬೀದರ್ ನಗರದ ಚಿಕ್ಕಪೇಟೆ ಹತ್ತಿರ ಈಗಾಗಲೇ 1 ಎಕರೆ ಜಮೀನು ಮಂಜೂರು ಮಾಡಿದೆ. ಮೊದಲನೇ ಕಂತಿನ ₹ 1 ಕೋಟಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಬಿಡುಗಡೆ ಮಾಡಲು ಈಗಾಗಲೇ ಆದೇಶಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಕನಸಿನ ಕೂಸಾದ ಕನ್ನಡ ಭವನಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕಾಮಗಾರಿ ಶೀಘ್ರ ಆರಂಭಿಸಬೇಕು. ಭವನವು ಗುಣಮಟ್ಟದಿಂದ ಕೂಡಿರುವಂತಾUsÀಲು ಅಧಿಕಾರಿಗಳ ತಂಡ ರಚಿಸಿ, ಕಾಮಗಾರಿಯ ಪ್ರತಿ ಹಂತದಲ್ಲಿಯೂ ಪರಿವೀಕ್ಷಣೆ ಮಾಡಬೇಕು. ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಸರ್ಕಾರವು ಕನ್ನಡ ರಕ್ಷಣೆಗೆ ಬದ್ಧವಾಗಿದೆ. ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕ, ಬೀದರ್ನ ಜಿಲ್ಲಾ ರಂಗಮಂದಿರಕ್ಕೆ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರ ಎಂದು ನಾಮಕರಣ ಮಾಡಲಾಗಿದೆ. ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಸೇರಿದಂತೆ ಕನ್ನಡ ಪರವಾದ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.