ಬೀದರ್: ‘ಮೂರು ಸಾವಿರ ಪವರ್ಮನ್ ಹುದ್ದೆಗಳಿಗೆ ಮೂರು ಲಕ್ಷ ಅರ್ಜಿಗಳು ಬಂದಿವೆ’ ಎಂದು ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ಕೆಪಿಟಿಸಿಎಲ್ ಮತ್ತು ಜೆಸ್ಕಾಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಪವರ್ಮನ್ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಬರುವ ಏಪ್ರಿಲ್ನೊಳಗೆ ನೇಮಕಾತಿ ಪ್ರಕ್ರಿಯೆ ಮುಗಿಯಲಿದೆ. ಮೊದಲ ಬಾರಿಗೆ ಇಡೀ ರಾಜ್ಯದಲ್ಲಿ ಒಂದೇ ದಿನ ದೈಹಿಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಬಳಿಕ ಎಇಇ, ಜೆಇ ಸೇರಿದಂತೆ ಇತರೆ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲಾಗುವುದು’ ಎಂದು ಹೇಳಿದರು.
‘ತುಮಕೂರು ಜಿಲ್ಲೆಯ ಪಾವಗಡದಲ್ಲಿ ಈಗಾಗಲೇ 10 ಸಾವಿರ ಎಕರೆಗೂ ಅಧಿಕ ಪ್ರದೇಶದಲ್ಲಿ ಸೋಲಾರ್ ಪಾರ್ಕ್ ನಿರ್ಮಿಸಲಾಗಿದೆ. ಪಾವಗಡ, ಶಿರಾ ಸುತ್ತಮುತ್ತ ಹೊಸದಾಗಿ ಹತ್ತು ಸಾವಿರ ಎಕರೆ ಪ್ರದೇಶದಲ್ಲಿ ಸೋಲಾರ್ ಪಾರ್ಕ್ ನಿರ್ಮಿಸಲಾಗುವುದು. ಜಮೀನು ಕೊಡಲು ರೈತರೇ ಮುಂದೆ ಬಂದಿದ್ದಾರೆ. ಈ ಯೋಜನೆ ಅನುಷ್ಠಾನಗೊಂಡರೆ ಮೂರು ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಅದನ್ನು ಸಂಪೂರ್ಣ ಕೃಷಿಗೆ ವಿನಿಯೋಗಿಸಲು ಚಿಂತನೆ ನಡೆದಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.