ಭಾಲ್ಕಿ: ‘ಬೀದರ್ ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸುಮಾರು 13 ಸಾವಿರ ಸ್ವಸಹಾಯ ಸಂಘಗಳಿಗೆ ₹5 ಕೋಟಿ ಲಾಭಾಂಶ ಸಿಕ್ಕಿದೆ’ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಉಮರಬ್ಬ ಹೇಳಿದರು.
ಪಟ್ಟಣದ ಭೀಮನಗರ ಬಡಾವಣೆಯ ಹನುಮಾನ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಪ್ರಗತಿ ಬಂಧು ಸ್ವಸಹಾಯ ತಂಡದ ಸದಸ್ಯರ ಲಾಭಾಂಶ ಹಂಚಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು 35 ವರ್ಷಗಳ ಹಿಂದೆ ಹುಟ್ಟು ಹಾಕಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಈ ಸಂಸ್ಥೆಯಿಂದ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಸಂಕಷ್ಟದ ಸಮಯದಲ್ಲಿ ಆಮ್ಲಜನಕ, ಆಂಬುಲೆನ್ಸ್, ಆಹಾರ ಕಿಟ್, ಮಾಸಾಶನ ಸೇರಿ ಮುಂತಾದ ಸೌಲಭ್ಯ ಕಲ್ಪಿಸಿ ಬಡಜನರ ನೆರವಿಗೆ ಧಾವಿಸುವ ಪ್ರಯತ್ನ ಮಾಡಲಾಗಿದೆ’ ಎಂದರು.
‘ಉತ್ತಮವಾಗಿ ಬ್ಯಾಂಕ್ ವ್ಯವಹಾರ ನಡೆಸಿದ ಸ್ವಸಹಾಯ ಸಂಘಗಳಿಗೆ ಧರ್ಮಸ್ಥಳ ಸಂಸ್ಥೆಯಿಂದ ಲಾಭಾಂಶ ನೀಡಲಾಗುತ್ತಿದೆ . ಬೀದರ್ ಜಿಲ್ಲೆಗೆ ₹5 ಕೋಟಿ ಲಾಭಾಂಶ ಬಂದಿದೆ. ಭಾಲ್ಕಿ ತಾಲ್ಲೂಕಿಗೆ ₹1 ಕೋಟಿ ಲಾಭಾಂಶ ಬಂದಿದ್ದು, ಸಂಘದ ಸದಸ್ಯರು ಲಾಭಾಂಶ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಇನ್ನಷ್ಟು ಪ್ರಗತಿ ಸಾಧಿಸಬೇಕು’ ಎಂದು ತಿಳಿಸಿದರು.
ತಾಲ್ಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ ಮಾತನಾಡಿ, ‘ಧರ್ಮಸ್ಥಳ ಸಂಸ್ಥೆಯ ಜನಪರ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ’ ಎಂದರು.
ತಾಲ್ಲೂಕು ಯೋಜನಾಧಿಕಾರಿ ಮಹಾಂತೇಶ ಎಸ್. ಮಾತನಾಡಿದರು. ಕೆನರಾ ಬ್ಯಾಂಕ್ ವ್ಯವಸ್ಥಾಪಕ ಮಹೇಶ ಬಾಲಡಗು, ಅಂಗದರಾವ್ ಇದ್ದರು. ರೇಖಾ ಸಂಗಡಿಗರು ಪ್ರಾರ್ಥನೆ ಗೀತೆ ನಡೆಸಿಕೊಟ್ಟರು. ಅಕ್ಕಮಹಾದೇವಿ ನಿರೂಪಿಸಿ, ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.