ADVERTISEMENT

50 ಶಿಕ್ಷಕರಿಗೆ ಆದರ್ಶ ಗುರು ಪ್ರಶಸ್ತಿ

ಜೀವನ ಗುರಿ ಸಾಧನೆಗೆ ಗುರು ಅಗತ್ಯ: ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 15:08 IST
Last Updated 9 ಸೆಪ್ಟೆಂಬರ್ 2020, 15:08 IST
ಬೀದರ್‍ನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಕನ್ನಡ ವಿಶಾರದ ಆದರ್ಶ ಗುರು ಪ್ರಶಸ್ತಿ ಪ್ರದಾನ ಮಾಡಲಾಯಿತು
ಬೀದರ್‍ನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಕನ್ನಡ ವಿಶಾರದ ಆದರ್ಶ ಗುರು ಪ್ರಶಸ್ತಿ ಪ್ರದಾನ ಮಾಡಲಾಯಿತು   

ಬೀದರ್: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ನಗರದ ಬಸವ ಕೇಂದ್ರದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ 50 ಶಿಕ್ಷಕರಿಗೆ ಕನ್ನಡ ವಿಶಾರದ ಆದರ್ಶ ಗುರು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮೂಹ ಸಂಪನ್ಮೂಲ ವ್ಯಕ್ತಿಗಳು, ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಪ್ರಶಸ್ತಿ ಫಲಕ, ಗ್ರಂಥ ಹಾಗೂ ನೆನಪಿನ ಕಾಣಿಕೆ ಕೊಟ್ಟು ಸನ್ಮಾನಿಸಲಾಯಿತು.

ಸಸಿಗೆ ನೀರೆರೆದು ಕಾರ್ಯಕ್ರಮ ಉದ್ಘಾಟಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಮಾತನಾಡಿ, ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಣದ ಪಾತ್ರ ಬಹುಮುಖ್ಯವಾಗಿದೆ. ಜೀವನದ ಗುರಿ ತಲುಪಲು ಗುರು ಬೇಕೇ ಬೇಕು ಎಂದು ಹೇಳಿದರು.

ADVERTISEMENT

ಒಳ್ಳೆಯ ಗುರು ಸಿಕ್ಕರೆ ಉನ್ನತ ಹುದ್ದೆ ಪಡೆಯಬಹುದು ಎನ್ನುವುದಕ್ಕೆ ನಾನೇ ನಿದರ್ಶನ. ಪ್ರತಿ ಹೆಜ್ಜೆಗೂ ಗುರು ಕರುಣೆ ದೊರೆತರೆ ಸಾಥನೆ ಪಥದತ್ತ ದಾಪುಗಾಲು ಹಾಕಬಹುದು ಎಂದು ತಿಳಿಸಿದರು.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘ ಸಂಸ್ಥೆಗಳ ಪ್ರತಿನಿಧಿ ಡಾ. ಶೇಖರಗೌಡ ಮಾಲಿಪಾಟೀಲ ಮಾತನಾಡಿ, ಗುರುವನ್ನು ಸ್ಮರಿಸುವುದು ಪುಣ್ಯದ ಕೆಲಸ ಎಂದು ಹೇಳಿದರು.

ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ಕನ್ನಡ ಭವನ ನಿರ್ಮಾಣ ಕಾಮಗಾರಿ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಭವನಕ್ಕೆ ಸಂಬಂಧಿಸಿದ ತಾಂತ್ರಿಕ ತೊಡಕುಗಳು ನಿವಾರಣೆಯಾಗಿದ್ದು, ಸರ್ಕಾರದ ಆಡಳಿತಾತ್ಮಕ ಅನುಮೋದನೆ ನಿರೀಕ್ಷೆಯಲ್ಲಿ ಇದ್ದೇವೆ ಎಂದು ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪ್ರತಿಭಾ ಚಾಮಾ, ಪರಿಷತ್ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ. ಬಸವರಾಜ ಬಲ್ಲೂರ ಮಾತನಾಡಿದರು.

ಪರಿಷತ್ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ಅಂಗಡಿ, ಎನ್.ಜಿ.ಎ. ಗೃಹ ನಿರ್ಮಾಣ ಸಂಘದ ಅಧ್ಯಕ್ಷ ಬಾಲಾಜಿ ಬಿರಾದಾರ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಭುಲಿಂಗ ತೂಗಾವೆ ಉಪಸ್ಥಿತರಿದ್ದರು.

ಶಿವಶಂಕರ ಟೋಕರೆ ಸ್ವಾಗತಿಸಿದರು. ಚನ್ನಬಸವ ಹೇಡೆ ನಿರೂಪಿಸಿದರು. ಸಿದ್ಧಾರೂಢ ಭಾಲ್ಕೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.