ಬೀದರ್: ಜಿಲ್ಲೆಯಲ್ಲಿ 15 ದಿನಗಳ ಅವಧಿಯಲ್ಲಿ ಹಮ್ಮಿಕೊಂಡ 19 ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳಲ್ಲಿ ಒಟ್ಟು 560 ಯುನಿಟ್ ರಕ್ತ ಸಂಗ್ರಹವಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನ ಶ್ರೇಷ್ಠ ದಾನವಾಗಿದೆ. ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ಎಂದು ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಯುವಕ, ಯುವತಿಯರನ್ನು ರಕ್ತದಾನಕ್ಕೆ ಪ್ರೇರೇಪಿಸಲು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದರು.
ಕ್ರಮವಾಗಿ 36, 32 ಹಾಗೂ 24 ಬಾರಿ ರಕ್ತದಾನ ಮಾಡಿದ ಅಂಚೆ ನೌಕರರ ರಾಷ್ಟ್ರೀಯ ಒಕ್ಕೂಟದ ಮಹಿಳಾ ಸಮಿತಿ ಅಧ್ಯಕ್ಷೆ ಮಂಗಲಾ ಭಾಗವತ್, ಆಕಾಶ ರಾಜಕುಮಾರ ಮಲಶೆಟ್ಟಿ ಮತ್ತು ಹಾಗೂ ರವಿಶಂಕರ ರೆಡ್ಡಿ ಶಿವಶೆಟ್ಟಿ ಅವರನ್ನು ಸನ್ಮಾನಿಸಿ, ಪ್ರಶಂಸಾ ಪತ್ರ ನೀಡಲಾಯಿತು.
ರಕ್ತನಿಧಿ ಕೇಂದ್ರದ ಅಧಿಕಾರಿ ಡಾ. ವೀರೇಂದ್ರ ಪಾಟೀಲ, ಸೂರ್ಯಕಾಂತ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಶರಣಯ್ಯ ಸ್ವಾಮಿ, ಆರ್ಸಿಎಚ್ ಅಧಿಕಾರಿ ಡಾ. ರಾಜಶೇಖರ ಪಾಟೀಲ, ಜಿಲ್ಲಾ ಮಲೇರಿಯಾ ಅಧಿಕಾರಿ ಸಂಜೀವಕುಮಾರ ಪಾಟೀಲ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಕಿರಣ ಪಾಟೀಲ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಸಂಗಾರೆಡ್ಡಿ ಇದ್ದರು. ಬ್ರಿಮ್ಸ್ ಪ್ರಯೋಗಶಾಲಾ ತಂತ್ರಜ್ಞ ಅರವಿಂದ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.