ಬೀದರ್: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯು ನಗರದ 12 ಕೇಂದ್ರಗಳಲ್ಲಿ ಶನಿವಾರ ನಡೆಯಿತು.
ಜಿಲ್ಲೆಯಲ್ಲಿ 2,899 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದರು. 2,135 ಅಭ್ಯರ್ಥಿಗಳು ಪರೀಕ್ಷೆ ಬರೆದರೆ 764 ಅಭ್ಯರ್ಥಿಗಳು ಗೈರಾಗಿದ್ದರು.
ನಗರದ ಗುರುನಾನಕ ಪಬ್ಲಿಕ್ ಸ್ಕೂಲ್, ನೇತಾಜಿ ನಗರದ ವಿದ್ಯಾರಣ್ಯ ಪ್ರೌಢಶಾಲೆ, ಜನವಾಡ ರಸ್ತೆಯ ಸಿದ್ಧಾರ್ಥ ಸಂಯುಕ್ತ ಪದವಿ ಪೂರ್ವ ಕಾಲೇಜ್, ಮಾಮನಕೇರಿಯ ಜ್ಞಾನಸುಧಾ ವಿದ್ಯಾಲಯ, ಓಲ್ಡ್ ಸಿಟಿಯ ಚಿತಾಖಾನಾದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್, ಅಲ್ಅಮಿನ್ ಉರ್ದು ಬಾಲಕರ ಪ್ರೌಢ ಶಾಲೆ, ಸೇಂಟ್ ಜೋಸೆಫ್ ಪದವಿ ಪೂರ್ವ ಕಾಲೇಜು, ಶಹಾಪುರ ಗೇಟ್ ಸಮೀಪ ಸೇಂಟ್ ಜೋಸೆಫ್ ಇಂಗ್ಲಿಷ್ ಮಿಡಿಯಂ ಹೈಸ್ಕೂಲ್, ಮನ್ನಳ್ಳಿ ರಸ್ತೆಯ ಗುರುನಾನಕ ಪಬ್ಲಿಕ್ಸ್ಕೂಲ್, ಗುರುನಾನಕ ಡಿಇಡಿ ಕಾಲೇಜ್ ಹಾಗೂ ಗುಂಪಾದ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ ಹೈಸ್ಕೂಲ್ನಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಯಿತು.
ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳು ಪರೀಕ್ಷೆ ಬರೆದರು. ಕೇಂದ್ರದಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ನಂತಹ ಎಲೆಕ್ಟ್ರಾನಿಕ್ ಸಾಧನಗಳನ್ನು ನಿಷೇಧಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿ, ಪರೀಕ್ಷಾ ಚಟುವಟಿಕೆಗಳ ಸೆರೆಹಿಡಿಲಾಯಿತು. ಪಿಎಸ್ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ ಭಾರಿ ನಿಗಾ ವಹಿಸಲಾಗಿದೆ.
ಅಭ್ಯರ್ಥಿಗಳನ್ನು ಪರಿಶೀಲನೆಗೆ ಒಳಪಡಿಸಿದ ನಂತರ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಯಿತು. ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಬಾರಾಟಕ್ಕೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.