ಬೀದರ್: ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಜೈ ಭಾರತ ಮಾತಾ ಸೇವಾ ಸಮಿತಿ ವತಿಯಿಂದ ನಗರದಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಭವ್ಯ ಮೆರವಣಿಗೆ ನಡೆಯಿತು.
ಸಮಿತಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಶ್ರೀ ಹವಾ ಮಲ್ಲಿನಾಥ ಮಹಾರಾಜರ ನೇತೃತ್ವದಲ್ಲಿ ನೌಬಾದ್ನಿಂದ ಆರಂಭಗೊಂಡ ಮೆರವಣಿಗೆಯು ಪ್ರತಾಪನಗರ, ಶಿವನಗರ, ಕೇಂದ್ರ ಬಸ್ ನಿಲ್ದಾಣ, ಮಡಿವಾಳ ಮಾಚಿದೇವ ವೃತ್ತ, ಕನ್ನಡಾಂಬೆ ರೋಟರಿ ವೃತ್ತ, ಜಿಲ್ಲಾ ಅಸ್ಪತ್ರೆ ತಿರುವು, ಅಂಬೇಡ್ಕರ್ ವೃತ್ತ, ಕ್ರಾಂತಿ ಗಣೇಶ, ಶಹಾಗಂಜ್ ಕಮಾನ್, ಗವಾನ್ ಚೌಕ್, ಚೌಬಾರಾ, ನಯಾ ಕಮಾನ್, ಬಸವೇಶ್ವರ ವೃತ್ತ, ಮಹಾವೀರ ವೃತ್ತ, ಭಗತ್ಸಿಂಗ್ ವೃತ್ತ, ಜಿಲ್ಲಾಧಿಕಾರಿ ಕಚೇರಿ, ಹರಳಯ್ಯ ವೃತ್ತ, ಮೋಹನ್ ಮಾರ್ಕೆಟ್, ಕೆಇಬಿ ರಸ್ತೆ, ಶಿವನಗರ ಮಾರ್ಗವಾಗಿ ಪಾಪನಾಶ ಮಂದಿರ ಪರಿಸರಕ್ಕೆ ತಲುಪಿ ಮುಕ್ತಾಯಗೊಂಡಿತು.
ಮೆರವಣಿಗೆ ಮುಂಚೂಣಿಯಲ್ಲಿದ್ದ ತೆರೆದ ಕಾರ್ನಲ್ಲಿ ಶ್ರೀ ಹವಾ ಮಲ್ಲಿನಾಥ ಮಹಾರಾಜರು ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದುಕೊಂಡು ನಿಂತಿದ್ದರು. ಭಾರತ ಮಾತೆ, ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ ಆಜಾದ್, ಡಾ. ಬಿ.ಆರ್. ಅಂಬೇಡ್ಕರ್, ಭಗತ್ಸಿಂಗ್ ಮೊದಲಾದ ಮಹಾ ಪುರುಷರು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸ್ವಾತಂತ್ರ್ಯ ಹೋರಾಟಗಾರರ ಬೃಹತ್ ಭಾವಚಿತ್ರಗಳನ್ನು ಇಡಲಾಗಿದ್ದ 69 ಅಲಂಕೃತ ವಾಹನಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.
ಬ್ಯಾಂಡ್ ಬಾಜಾ, ಭಜನೆ ಮೆರವಣಿಗೆಯ ಮೆರುಗು ಹೆಚ್ಚಿಸಿದವು. ಮೆರವಣಿಗೆ ಉದ್ದಕ್ಕೂ ದೇಶ ಭಕ್ತಿ ಗೀತೆಗಳ ಸಂಗೀತದ ತಾಳಕ್ಕೆ ತಕ್ಕಂತೆ ಯುವಕರು, ಹಿರಿಯರು ಹೆಜ್ಜೆ ಹಾಕಿ ಸಂಭ್ರಮಿಸಿದರು. ಬೋ ಭಾರತ ಮಾತಾ ಕೀ ಜೈ ಎಂಬಿತ್ಯಾದಿ ಘೋಷಣೆಗಳು ಮುಗಿಲು ಮುಟ್ಟಿದವು. ದೇಶಾಭಿಮಾನ ಉಕ್ಕಿಸಿದ ಮೆರವಣಿಗೆಯಲ್ಲಿ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮೆರವಣಿಗೆ ನಂತರ ಪಾಪನಾಶ ಮಂದಿರದ ಕಲ್ಯಾಣ ಮಂಟಪದಲ್ಲಿ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಅವರ ಕುಟುಂಬದ ಸದಸ್ಯರನ್ನು ಸನ್ಮಾನಿಸಲಾಯಿತು.
ಯುವಕರಲ್ಲಿ ದೇಶಾಭಿಮಾನ ಮೂಡಿಸಲು ಹಾಗೂ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಹೋರಾಟಗಾರರನ್ನು ಪರಿಚಯಿಸಲು ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಹವಾ ಮಲ್ಲಿನಾಥ ಮಹಾರಾಜರು ತಿಳಿಸಿದರು.
ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಹೋರಾಟ ಹಾಗೂ ಹೋರಾಟಗಾರರ ಕುರಿತ ಪಾಠವನ್ನು ಪಠ್ಯಕ್ರಮದಲ್ಲಿ ಸೇರಿಸಬೇಕು. ಈ ಮೂಲಕ ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಹೋರಾಟಗಾರರನ್ನು ಇಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು ಹೇಳಿದರು.
ಸಮಿತಿಯ ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಪಪ್ಪು ಪಾಟೀಲ ಖಾನಾಪುರ, ಪ್ರಮುಖರಾದ ವೈಜಿನಾಥ ಝಳಕೆ, ಶರಣಪ್ಪ ಮಾಳಗೆ, ಮಂಜು ಮಾಳಗೆ, ದಿಲೀಪ್ ಪಾಟೀಲ, ಶಿವಕುಮಾರ, ನಾಗು ಜಾಬಶೆಟ್ಟಿ, ಆಶ್ವಿನ್, ಸಂಗಮೇಶ, ವಿಶ್ವ, ವಿಷ್ಣುಕಾಂತ, ಪ್ರಮೋದ್ ಗಾದಾ, ನಂದೇಶ್ ಪಾಟೀಲ, ನಾಗಶೆಟ್ಟಿ ಬೇಮಳಖೇಡ ಇದ್ದರು.
ಇದಕ್ಕೂ ಮುನ್ನ ಶ್ರೀ ಹವಾ ಮಲ್ಲಿನಾಥ ಮಹಾರಾಜರು ನೌಬಾದ್ನ ಶರಣಪ್ಪ ಮಾಳಗೆ ಅವರ ಜಮೀನಿನಲ್ಲಿ ಶ್ರೀ ಸತ್ಯ ಹನುಮಾನ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.