ADVERTISEMENT

ಪ್ರತಿಯೊಬ್ಬರು ಲಸಿಕೆ ಪಡೆಯಲು ಶಾಸಕ ರಾಜಶೇಖರ ಪಾಟೀಲ ಸಲಹೆ

ಶಾಸಕರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸದಸ್ಯರ ಸಭೆ

​ಪ್ರಜಾವಾಣಿ ವಾರ್ತೆ
Published 5 ಮೇ 2021, 5:16 IST
Last Updated 5 ಮೇ 2021, 5:16 IST
ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ ಬಿ. ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ನೀಡುತ್ತಿರುವುದನ್ನು ಶಾಸಕ ರಾಜಶೇಖರ ಪಾಟೀಲ ವಿಚಾರಿಸಿದರು
ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ ಬಿ. ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ನೀಡುತ್ತಿರುವುದನ್ನು ಶಾಸಕ ರಾಜಶೇಖರ ಪಾಟೀಲ ವಿಚಾರಿಸಿದರು   

ಹುಮನಾಬಾದ್: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅದರ ನಿಯಂತ್ರಣಕ್ಕೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಶಾಸಕ ರಾಜಶೇಖರ ಪಾಟೀಲ ತಿಳಿಸಿದರು.

ತಾಲ್ಲೂಕಿನ ಹಳ್ಳಿಖೇಡ್ (ಬಿ) ಪುರಸಭೆ ಆವರಣದಲ್ಲಿ ನಡೆದ ಸರ್ವ ಪಕ್ಷದ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಬಗ್ಗೆ ಪ್ರತಿ ಬಡಾವಣೆಯ ಜನರಲ್ಲಿ ಜಾಗೃತಿ ಮೂಡಿಸಿ. ಪ್ರತಿಯೊಬ್ಬರು ಲಸಿಕೆಯನ್ನು ಪಡೆದರೆ ಕೋವಿಡ್ ಸೋಂಕಿನಿಂದ ಪಾರಾಗಲು ಸಾಧ್ಯವಿದೆ ಎಂದು ಹೇಳಿದರು.

ADVERTISEMENT

ಪುರಸಭೆ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಸೇರಿ ಜನರಿಗೆ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್, ಅಂತರವನ್ನು ಕಾಪಾಡಿಕೊಳ್ಳವಂತೆ ಅರಿವು ಮೂಡಿಸಬೇಕು. ಅಗತ್ಯ ವಸ್ತುಗಳಾದ ತರಕಾರಿ, ಹಣ್ಣುಗಳನ್ನು ಖರೀದಿಸಲು ಪ್ರತ್ಯೇಕವಾದ ಸ್ಥಳದ ವ್ಯವಸ್ಥೆಯನ್ನು ಪುರಸಭೆ ಕಲ್ಪಿಸಬೇಕು. ವ್ಯಾಪಾರಸ್ಥರಿಗೆ ಮತ್ತು ಗ್ರಾಹಕರಿಗೆ ಕಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ತಿಳಿಸಿದರು.

ಸಾರ್ವಜನಿಕರು ನೆಪ ಹೇಳಿಕೊಂಡು ಓಡಾಡುವುದನ್ನು ನಿಲ್ಲಿಸಬೇಕು. ಅಗತ್ಯವಿದ್ದರೆ ಮಾತ್ರ ಮನೆಗಳಿಂದ ಹೊರಗೆ ಬನ್ನಿ. ಬರುವಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಕೋವಿಡ್ ಭಯವನ್ನು ಬಿಟ್ಟು ಸುರಕ್ಷತೆಯನ್ನು ಕಾಪಾಡಿಕೊಂಡು ಧೈರ್ಯದಿಂದ ಇರಬೇಕು. ಸ್ವಲ್ಪ ದಿನ ಯಾವುದೇ ಸಭೆ, ಸಮಾರಂಭಗಳಲ್ಲಿ ಭಾಗವಹಿಸಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮಣರಾವ ಬುಳ್ಳಾ, ಹಳ್ಳಿಖೇಡ್ ಬಿ. ಪುರಸಭೆ ಅಧ್ಯಕ್ಷ ಮಹಾಂತಯ್ಯ ತೀರ್ಥ, ಪುರಸಭೆ ಉಪಾಧ್ಯಕ್ಷೆ ಹುರ್ಮತ್ ಬೇಗಂ, ತಹಶೀಲ್ದಾರ್ ಜೈಶ್ರೀ, ತಾಲ್ಲೂಕು ನೋಡಲ್ ಅಧಿಕಾರಿ ಡಾ.ಗೋವಿಂದ್, ಪುರಸಭೆ ಮುಖ್ಯಾಧಿಕಾರಿ ಮಹಮ್ಮದ್, ಪುರಸಭೆ ಸದಸ್ಯರಾದ ಅಬ್ದುಲ್ ರಜಾಕ್, ಸಾಜಿದ್‌ ಪಟೇಲ್, ಯೂಸೋಫ್, ನಾಗರಾಜ, ಅಬ್ದುಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.