ಬೀದರ್: ‘ಬೀದರ್ನಿಂದ ನಾಗರಿಕ ವಿಮಾನಯಾನ ಸೇವೆ ಆರಂಭವಾದರೆ ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಜೊತೆಗೆ ಅನೇಕ ಅಭಿವೃದ್ಧಿ ಕಾರ್ಯಗಳ ನಿರೀಕ್ಷೆಗಳು ಗರಿಗೆದರುತ್ತವೆ. ಹೀಗಾಗಿ ಬೇಕು, ಬೇಡಿಕೆಗಳ ಪಟ್ಟಿಯನ್ನು ಸಿದ್ಧಪಡಿಸಿ ಪ್ರಸ್ತಾವ ಸಲ್ಲಿಸಬೇಕು’ ಎಂದು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಸೂಚನೆ ನೀಡಿದರು.
ಬೆಂಗಳೂರಿನಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಬೀದರ್ ವಿಮಾನ ನಿಲ್ದಾಣದ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
‘ನಗರದಲ್ಲಿನ ಒಳ ಚರಂಡಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಬೇಕು. ಅಗತ್ಯ ಎನ್ನುವುದು ಕಂಡು ಬಂದರೆ ಪ್ರಸ್ತಾವದಲ್ಲಿ ಸೇರಿಸಬೇಕು’ ಎಂದು ಹೇಳಿದರು.
‘ವಿಮಾನ ನಿಲ್ದಾಣ ಆರಂಭಿಸಲು ಅಗತ್ಯವಿರುವ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ವಿಮಾನ ಹಾರಾಟ ಶುರು ಮಾಡಲು ಪ್ರಾಯೋಗಿಕ ಪರೀಕ್ಷೆ ನಡೆಸಬೇಕು. ಕುಡಿಯುವ ನೀರು, ರಸ್ತೆ, ವಿದ್ಯುತ್, ಇಂಟರ್ನೆಟ್ ಸಂಪರ್ಕ, ರಕ್ಷಣಾ ಸಿಬ್ಬಂದಿ ನಿಯೋಜನೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ ಮಾತನಾಡಿ, ‘ಟರ್ಮಿನಲ್ ಕಟ್ಟಡ ನಿರ್ಮಾಣ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸುವ ಕಾರ್ಯ ಈಗಾಗಲೇ ಆರಂಭವಾಗಿದೆ. ವಿಮಾನ ನಿಲ್ದಾಣದ ಕಾಮಗಾರಿಯನ್ನು ಶೀಘ್ರವಾಗಿ ಹಾಗೂ ಮುಂದಿನ ದಿನಗಳಲ್ಲಿ ವಿಮಾನ ಹಾರಾಟಕ್ಕೆ ಯಾವುದೇ ತೊಡಕುಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು’ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ ಶ್ರೀಧರ್, ಬೀದರ್ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟೆಪ್ಪಗೋಳ, ಬೀದರ್ ನಗರಸಭೆ ಆಯುಕ್ತ ಬಿ.ಬಸಪ್ಪ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸಿ.ಪಟ್ಟಾಭಿ, ಕೆಎಸ್ಐಐಡಿಸಿ ಶಾಮಂತ ಎನ್, ಕೆಎಸ್ಪಿಸಿಬಿ ಪರಿಸರ ಅಧಿಕಾರಿ ಎಂ.ಎ.ಮಣಿಯಾರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.